
ಬೆಂಗಳೂರು: ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಈಗಾಗಲೇ ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದು ಇದೀಗ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಅರೆಸ್ಟ್ ಮಾಡಿದ್ದಾರೆ.
ಗುರುವಾರ ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅದರಂತೆ ಇಂದು (ಶುಕ್ರವಾರ) ಮುನಿರತ್ನ ಅವರು ಜೈಲಿನಿಂದ ಹೊರಬಂದ ತಕ್ಷಣವೇ ಪೊಲೀಸರು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದು, ಇಂದಿನಿಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಿದ್ದಾರೆ.
ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಬುಧವಾರ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಕಗ್ಗಲೀಪುರದ ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ನಡೆದಿರುವುದಾಗಿ 40 ವರ್ಷ ವಯಸ್ಸಿನ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ದೂರಿನ ಅನ್ವಯ ಪೊಲೀಸರು Information Technology Act 2000, ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್ ದಾಖಲಿಸಿದ್ದರು. ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.













