ಕಾರ್ಕಳ ಅಂಬೇಡ್ಕರ್ ಭವನದ ಬಾಕಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸಂಜೀವ ಮಾಳ ಆಗ್ರಹ

ಕಾರ್ಕಳ ಆ 23: ಕಾರ್ಕಳ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಬಹುದಿನಗಳ ಬೇಡಿಕೆಯಾದ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣಕಾಮಗಾರಿಗೆ ಹಿಂದಿನ ಬಿಜೆಪಿ ಸರಕಾರ ಮಂಜೂರು ಮಾಡಿದ್ದ ರೂ 06.00 ಕೋಟಿ ಅನುದಾನದಲ್ಲಿ ಈವರೆಗೆ ಕೇವಲ ರೂ 75.00 ಲಕ್ಷ ಅನುದಾನವನ್ನು ಮಾತ್ರ ಬಿಡುಗಡೆ ಮಾಡಿದ್ದು, ಬಾಕಿ ಅನುದಾನವನ್ನು ಬಿಡುಗಡೆ ಮಾಡದೇ ಕಾಂಗ್ರಸ್ ಸರಕಾರ ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಕಾರ್ಕಳ ಎಸ್.ಸಿ ಮೋರ್ಚಾದ ಅಧ್ಯಕ್ಷರಾದ ಸಂಜೀವ ಮಾಳ ಆರೋಪಿಸಿದ್ದಾರೆ.
ಕಾರ್ಕಳ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಮಾಜಿ ಸಚಿವರಾದ ವಿ ಸುನಿಲ್ ಕುಮಾರ್ ಅವರ ವಿಶೇಷ ಮುತುವರ್ಜಿಯಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಕಾರ್ಕಳದ ಕಾಬೆಟ್ಟು ಎಂಬಲ್ಲಿ ತಾಲೂಕು ಮಟ್ಟದ ಅಂಬೇಡ್ಕರ್ ಭವನಕ್ಕೆ ದಾಖಲೆ ಪ್ರಮಾಣದ ರೂ06.00 ಕೋಟಿ ಅನುದಾನವನ್ನು ಮಂಜೂರು ಮಾಡಿಸಿ, ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಸುಸಜ್ಜಿತ, ಭವ್ಯವಾದ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಆರಂಭಿಸಲಾಗಿರುತ್ತದೆ. ಪ್ರಸ್ತುತ ಸದ್ರಿ ಕಾಮಗಾರಿಯ ಒಟ್ಟು ಯೋಜನಾ ವೆಚ್ಚದ ರೂ. 06.00 ಕೋಟಿ ಅನುದಾನದಲ್ಲಿ ಕೇವಲ ರೂ. 75.00 ಲಕ್ಷ ಅನುದಾನ ಮಾತ್ರ ಬಿಡುಗಡೆ ಆಗಿದ್ದು, ಈಗಿನ ಕಾಂಗ್ರೆಸ್ ಸರಕಾರವು ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಯ ಬಾಕಿ ಇರುವ ಅನುದಾನವನ್ನು ಬಿಡುಗಡೆ ಮಾಡದೆ ಇರುವುದರಿಂದ ನಿರ್ಮಾಣ ಕಾಮಗಾರಿಯ ವಿಳಂಬವಾಗಿದ್ದು, ಕಾಮಗಾರಿ ಪೂರ್ಣವಾಗದೆ ಸಮುದಾಯದ ಜನರ ಕಾರ್ಯ ಚಟುವಟಿಕೆಗೆ ತುಂಬಾ ತೊಂದರೆಯಾಗುತ್ತಿದೆ. ದಲಿತರು, ಹಿಂದುಳಿದವರು ಹಾಗೂ ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಅವರ ಹೆಸರೇಳಿಕೊಂಡು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಈಗ ಪರಿಶಿಷ್ಟ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಸಮುದಾಯದ ಜನರಿಗೆ ದ್ರೋಹವೆಸಗುತ್ತಿದೆ. ಕಾರ್ಕಳ ತಾಲೂಕು ಅಂಬೇಡ್ಕರ್ ಭವನ ಸೇರಿದಂತೆ ಹೆಬ್ರಿ ಹಾಗೂ ಇತರ ಅಂಬೇಡ್ಕರ್ ಭವನಗಳ ಬಾಕಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಸಮುದಾಯದ ಜನತೆಯ ಪರವಾಗಿ ರಾಜ್ಯ ಸರ್ಕಾರಕ್ಕೆ ಸಂಜೀವ ಮಾಳ ಅಗ್ರಹಿಸಿದ್ದಾರೆ.













