
ವಿಧಾನಪರಿಷತ್ತು: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ ಮುನಿಯಪ್ಪ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಹೋಟೆಲ್ಗಳಿಗೆ ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳನ್ನು ಬೇಡಿಕೆಯಂತೆ ನೀಡುವುದು ಸದ್ಯ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಆಸ್ಪತ್ರೆಗಳು, ವಸತಿ ನಿಲಯಗಳು ಹಾಗೂ ವಸತಿ ಶಾಲೆಗಳಿಗೆ ಆದ್ಯತೆಯ ಆಧಾರದ ಮೇಲೆ ಅಡುಗೆ ಅನಿಲ ಪೂರೈಕೆ ಮುಂದುವರಿಸಲಾಗುತ್ತದೆ. ಇನ್ನೂ ಸುಮಾರು 10 ದಿನಗಳಲ್ಲಿ ಈ ಸಮಸ್ಯೆ ಪರಿಹಾರವಾಗುವ ಸಾಧ್ಯತೆ ಇದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.
ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯರಾದ ಐವನ್ ಡಿಸೋಜಾ ಹಾಗೂ ನಾಗರಾಜ್ ಯಾದವ್ ಅಡುಗೆ ಅನಿಲ ಪೂರೈಕೆಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಪ್ರಸ್ತಾಪಿಸಿದ್ದು ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ತೈಲ ಕಂಪನಿಗಳ ಅಧಿಕಾರಿಗಳೊಂದಿಗೆ ಬೆಳಿಗ್ಗೆ ಸಭೆ ನಡೆಸಿದ್ದು, ಅಗತ್ಯ ಸೇವೆಗಳಿಗೆ ಆದ್ಯತೆಯಂತೆ ಗ್ಯಾಸ್ ಪೂರೈಸುವಂತೆ ಸೂಚನೆ ನೀಡಲಾಗಿದೆ.
ಪ್ರಸ್ತುತ ಹೋಟೆಲ್ಗಳಿಗೆ ಗ್ಯಾಸ್ ಸಿಲಿಂಡರ್ ನೀಡಲು ಸಾಕಷ್ಟು ಸಂಗ್ರಹ ಇಲ್ಲ. ಆದ್ದರಿಂದ ಸಮಸ್ಯೆ ಬಗೆಹರಿಯುವವರೆಗೆ ಹೋಟೆಲ್ ಮಾಲೀಕರು ಸಹನೆ ತಾಳಬೇಕು ಎಂದು ಮನವಿ ಮಾಡಿದರು.


ಈಗಾಗಲೇ ಮಧ್ಯಪ್ರಾಚ್ಯದಿಂದ ಎರಡು ಹಡಗುಗಳಲ್ಲಿ ತೈಲ ಬಂದಿದ್ದು, ಇನ್ನೂ 10 ರಿಂದ 12 ಹಡಗುಗಳು ಬರುವ ನಿರೀಕ್ಷೆಯಿದೆ. ಅವು ಬಂದ ಬಳಿಕ ಗ್ಯಾಸ್ ಪೂರೈಕೆ ಸಮಸ್ಯೆ ಸಂಪೂರ್ಣವಾಗಿ ಸರಿಯಾಗಲಿದೆ. ಇನ್ನು, ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ಗಳನ್ನು ಹೆಚ್ಚುವರಿ ದರಕ್ಕೆ ಮಾರಾಟ ಮಾಡುವವರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಆಟೋ ರಿಕ್ಷಾಗಳಿಗೆ ಗ್ಯಾಸ್ ಪೂರೈಕೆಯಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಮಂಗಳೂರಿನಲ್ಲಿ ಆಟೋ ಚಾಲಕರು ಸಮಸ್ಯೆ ಎದುರಿಸುತ್ತಿರುವ ಮಾಹಿತಿ ಬಂದಿದ್ದು, ಅಲ್ಲಿಯೂ ಆಟೋಗಳಿಗೆ ಗ್ಯಾಸ್ ಸರಬರಾಜು ಮಾಡಲು ಸೂಚಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.







