
ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ಆಯುಧದಿಂದ ಇರಿದು ಕೊಲೆ ಮಾಡಿರುವ ಘಟನೆ ಮಣಿಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿ ವನಜಾ ಪೂಜಾರ್ತಿ (60) ಎಂದು ಗುರುತಿಸಲಾಗಿದೆ. ಕೊಲೆಗೆ ಸಂಬಂಧಿಸಿ ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿಗಳಾದ ವೆಲೇರಿಯನ್ ಮೆಂಡೊನ್ಸಾ ಮತ್ತು ಪ್ರವೀಣ್ ಮೆಂಡೊನ್ಸಾ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಿಬ್ಬರು ಅಣ್ಣತಮ್ಮಂದಿರ ಮಕ್ಕಳಾಗಿದ್ದು, ಇವರು ವನಜಾ ಪೂಜಾರಿ ಅವರೊಂದಿಗೆ ಆಗಾಗ ಮದ್ಯ ಸೇವನೆ ಮಾಡುತ್ತಿದ್ದರು. ಮಾ.9ರಂದು ಸಂಜೆ ಮದ್ಯಸೇವನೆ ಮಾಡುತ್ತಿರುವಾಗ ಕ್ಷುಲ್ಲಕ ಕಾರಣಕ್ಕೆ ಇವರ ಮಧ್ಯೆ ಜಗಳವಾಗಿದ್ದು, ವನಜಾ ಪೂಜಾರ್ತಿಯನ್ನು ಹರಿತವಾದ ಆಯುಧದಿಂದ ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಕೆಎಂಸಿ ಮಣಿಪಾಲದ ಫೊರೆನ್ಸಿಕ್ ವೈದ್ಯರು, ಸೀನ್ ಆಫ್ ಕ್ರೈಂ ಆಫೀಸರ್ (SOCO) ತಂಡ, ಶ್ವಾನ ದಳ ಹಾಗೂ ಫಿಂಗರ್ ಪ್ರಿಂಟ್ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.





















































































