
ಉಡುಪಿ: ಇತ್ತೀಚಿನ ದಿನಗಳಲ್ಲಿ ಪ್ರಿ ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ಮಾಡಿಸುವುದು ಒಂದು ಟ್ರೆಂಡ್ ಆಗಿದ್ದು ಇದೀಗ ಈ ವಿಚಾರದಲ್ಲಿ ಉಡುಪಿ ಶ್ರೀ ಕೃಷ್ಣ ಮಠ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪರ್ಯಾಯ ಪುತ್ತಿಗೆ ಮಠವು ಕೃಷ್ಣ ಮಠದ ರಥ ಬೀದಿಯ ಆವರಣದಲ್ಲಿ ಪ್ರಿ ವೆಡ್ಡಿಂಗ್ ಹಾಗು ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ಗೆ ನಿಷೇಧ ಹೇರಿದೆ.
ಈ ಫೋಟೋ ಶೂಟ್ ಗಳಿಂದ ಬೆಳ್ಳಂಬೆಳಗ್ಗೆ ಹಾಗೂ ಸ್ವಾಮೀಜಿಗಳ ಓಡಾಟದ ವೇಳೆ ಮುಜುಗರದ ಸನ್ನಿವೇಶ ಸೃಷ್ಟಿಯಾಗುತ್ತಿದ್ದು ಮಠದ ಆವರಣದಲ್ಲಿ ಅಸಭ್ಯ ವರ್ತನೆಯನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.
ಕೃಷ್ಣ ಮಠದ ರಥಬೀದಿ ಪಾರಂಪರಿಕ ಕಟ್ಟಡಗಳು ಇರುವ ಜಾಗ. ಅಷ್ಟಮಠಾಧೀಶರು ಓಡಾಡುವ ರಥಬೀದಿ ಇದಾಗಿದ್ದು ನೂರಾರು ವರ್ಷಗಳಿಂದ ಯತಿಗಳು, ದಾಸರು ನಡೆದಾಡಿದ ಬೀದಿ ಇದಾಗಿದೆ. ಪ್ರತಿ ದಿನ ರಥ ಬೀದಿಯಲ್ಲಿ ಉತ್ಸವ ನಡೆಯುತ್ತದೆ. ಅಷ್ಟೇ ಅಲ್ಲದೆ ಇದು, ಅಷ್ಟಮಠಗಳು ಇರುವ ರಥಬೀದಿಯಾಗಿದೆ. ಪ್ರಿ ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ನೆಪದಲ್ಲಿ ರಥಬೀದಿಯಲ್ಲಿ ಪ್ರೇಮ ಸಲ್ಲಾಪ ನಡೆಯುತ್ತಿದೆ. ಇಲ್ಲಿ ಜೋಡಿಹಕ್ಕಿಗಳು ಸರಸ ಸಲ್ಲಾಪ ನಡೆಸುವುದು ಸರಿಯಲ್ಲ. ಹಾಗೆ ಮಾಡುವುದರಿಂದ ಧಾರ್ಮಿಕ ವಾತಾವರಣಕ್ಕೆ ಅಡ್ಡಿ ಆಗುತ್ತದೆ. ಕೇರಳ ಬೆಂಗಳೂರು ಕಡೆಯಿಂದ ಬರುವ ಫೋಟೋಗ್ರಾಫರ್ಸ್ ಹಾವಳಿ ಹೆಚ್ಚಾಗಿದ್ದು ಹೀಗಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ.















































