ಗುರಿ ಸ್ಪಷ್ಟವಿದ್ದರೆ ಯಶಸ್ಸು ದೂರವಲ್ಲ: ವಿವೇಕ್ ಭಂಡಾರಿ

ಮೂಡುಬಿದಿರೆ, ಆ. 6: ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ಸು ಕೇವಲ ಬುದ್ಧಿಮತ್ತೆಯ ಫಲವಲ್ಲ; ದೃಢ ಸಂಕಲ್ಪ, ನಿರಂತರ ಪರಿಶ್ರಮ ಹಾಗೂ ಸರಿಯಾದ ಮಾರ್ಗದರ್ಶನದ ಸಮನ್ವಯವೇ ಸಾಧನೆಯ ನಿಜವಾದ ಸೂತ್ರ ಎಂದು ರಾಷ್ಟ್ರಮಟ್ಟದ ವೃತ್ತಿಮಾರ್ಗದರ್ಶನ ತಜ್ಞ ವಿವೇಕ್ ಭಂಡಾರಿ ಹೇಳಿದರು.
ಮೂಡುಬಿದಿರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕೆರಿಯರ್ ಗೈಡೆನ್ಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಜಾಗತಿಕ ಮಟ್ಟದಲ್ಲಿ ನಿರಂತರವಾಗಿ ಬದಲಾಗುತ್ತಿರುವ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ತಮ್ಮ ಆಸಕ್ತಿ, ಸಾಮರ್ಥ್ಯ ಮತ್ತು ಅಭಿರುಚಿಗೆ ಅನುಗುಣವಾಗಿ ವೃತ್ತಿ ಆಯ್ಕೆ ಮಾಡಿಕೊಳ್ಳಬೇಕೆಂದರು.
ಸ್ಪರ್ಧಾತ್ಮಕ ಪರೀಕ್ಷೆಗಳ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸುವ ಮನೋಭಾವ ಹಾಗೂ ಯೋಜಿತ ಅಧ್ಯಯನವೇ ಯಶಸ್ಸಿನ ಮೆಟ್ಟಿಲುಗಳಾಗಿವೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಜ್ಞಾನವನ್ನು ಮಾತ್ರವಲ್ಲ, ಜೀವನದ ದೃಷ್ಟಿಕೋನ, ಮೌಲ್ಯಪ್ರಜ್ಞೆ ಮತ್ತು ಸಾಮಾಜಿಕ ಬದ್ಧತೆಯನ್ನು ಬೆಳೆಸುವ ಸಾಧನವಾಗಬೇಕು ಎಂದು ಹೇಳಿದರು.ಗುರಿ ಸ್ಪಷ್ಟವಾಗಿದ್ದರೆ ಸಾಧನೆಯ ಹಾದಿ ಸುಗಮವಾಗುತ್ತದೆ; ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಶಿಸ್ತು, ಪರಿಶ್ರಮ ಮತ್ತು ಆತ್ಮವಿಶ್ವಾಸವನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕೆಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಎಂಜಿನಿಯರಿಂಗ್, ವೈದ್ಯಕೀಯ ಹಾಗೂ ಇತರ ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿನ ವೃತ್ತಿ ಅವಕಾಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ, ಕಾಲನಿರ್ವಹಣೆ, ಅಧ್ಯಯನ ತಂತ್ರಗಳು ಹಾಗೂ ವೃತ್ತಿ ಯೋಜನೆ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಲಾಯಿತು.
ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಉಪಸ್ಥಿತರಿದ್ದರು. ಉಪನ್ಯಾಸಕಿ ಮಂಜುಳಾ ನಾಯ್ಕ್ ನಿರೂಪಿಸಿದರು, ಉಪನ್ಯಾಸಕಿ ಪ್ರಿಯಾಂಕ ವಂದಿಸಿದರು.
ಎಕ್ಸಲೆಂಟ್ ಪ್ರೌಢಶಾಲೆಯಲ್ಲೂ ಕಾರ್ಯಕ್ರಮ: ಸಂಸ್ಥೆಯ 9 ಮತ್ತು 10ನೇ ತರಗತಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿಯೂ ಆಯೋಜಿಸಲಾಗಿದ್ದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ವಿವೇಕ್ ಭಂಡಾರಿ ಅವರು UPSC, IIT-JEE, NEET, CA, CLAT ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಸ್ವರೂಪ ಮತ್ತು ಸಿದ್ಧತೆ ಕುರಿತು ಮಾಹಿತಿ ನೀಡಿ, ಆತ್ಮವಿಶ್ವಾಸ ಹಾಗೂ ನಿರಂತರ ಪ್ರಯತ್ನದಿಂದ ಗುರಿ ಸಾಧಿಸಲು ಪ್ರೇರೇಪಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಅಧ್ಯಯನ ಪದ್ಧತಿ, ಸಮಯಪಾಲನೆ ಮತ್ತು ಶಿಸ್ತನ್ನು ಅಳವಡಿಸಿಕೊಂಡು ಸ್ಪಷ್ಟ ಗುರಿಯೊಂದಿಗೆ ಮುನ್ನಡೆಯಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್, ಸಿಬಿಎಸ್ಇ ಪ್ರಾಂಶುಪಾಲ ಶ್ರೀಪ್ರಸಾದ್, ಹಳೆಯ ವಿದ್ಯಾರ್ಥಿನಿ ಮೌಲ್ಯ ವೈ.ಆರ್. ಜೈನ್ ಹಾಗೂ ವಿಜೇತಾ ಉಪಸ್ಥಿತರಿದ್ದರು.

























































