
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ಹೂಮನ್ ಮೆಟಾನ್ನೂಮೋ ವೈರಸ್ ಮಾರಣಾಂತಿಕ ಅಥವಾ ಅಪಾಯಕಾರಿ ಅಲ್ಲ ಎಂದು ಈಗಾಗಲೇ ಕೇಂದ್ರ ಸರ್ಕಾರ, ಆರೋಗ್ಯ ತಜ್ಞರು ಹೇಳಿರುವುದರಿಂದ ಈ ಬಗ್ಗೆ ಜನ ಆತಂಕಗೊಳ್ಳದಂತೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು ಎಚ್ಎಂಪಿವಿ ಪ್ರತೀ ವರ್ಷ ಹರಡುವ ಸಾಮಾನ್ಯ ವೈರಸ್ ಆಗಿದ್ದು ಇದು ಅಪಾಯಕಾರಿಯಲ್ಲ, ಮಾರಣಾಂತಿಕವೂ ಅಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಬಗ್ಗೆ ಹೆಚ್ಚಿನ ಜನ ಜಾಗೃತಿ ಮೂಡಿಸಲು ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ. ಆದರೆ, ಕೆಲ ಮಾಧ್ಯಮಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಈ ವೈರಸ್ ಬಗ್ಗೆ ಬರುತ್ತಿರುವ ವರದಿಗಳಿಂದ ಜನ ಆತಂಕಗೊಳ್ಳುತ್ತಿದ್ದಾರೆ. ಇದರ ಲಾಭವನ್ನು ಕೆಲ ಪ್ರಯೋಗಾಲಯಗಳು ಪಡೆಯುತ್ತಿವೆ. ಬಿಸಿನೀರು ಸೇವನೆಯಿಂದ ಹೋಗುವ ವೈರಸ್ ಬಗ್ಗೆ ಆತಂಕಗೊಂಡು ಜನ ಎಚ್ಎಂಪಿವಿ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆ, ಪ್ರಯೋಗಾಲಯಗಳಿಗೆ ಹೋಗುತ್ತಿದ್ದಾರೆ. ಕೆಲ ಲ್ಯಾಬ್ಗಳಲ್ಲಿ ಪರೀಕ್ಷೆಗೆ 10ರಿಂದ 15 ಸಾವಿರ ರು. ವರೆಗೆ ಶುಲ್ಕ ವಿಧಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಮಾಡಿ. ಜೊತೆಗೆ ವೈರಸ್ ಹರಡುವಿಕೆ ತಡೆಗೆ ಕ್ರಮ ವಹಿಸಿ ಹಾಗೂ ಇದರ ರೂಪಾಂತರಗಳ ಮೇಲೆ ನಿಗಾ ಇಡಿ. ಜನರಲ್ಲಿ ಆತಂಕ ಸೃಷ್ಟಿಸಿ ಪರೀಕ್ಷೆಗೆ ಲ್ಯಾಬ್ ಗಳಲ್ಲಿ ಹೆಚ್ಚು ಹಣ ಪಡೆಯುತ್ತಿರುವುದನ್ನು ತಡೆಯಲು ಕೂಡ ಕ್ರಮ ವಹಿಸಿ ಎಂದು ಮುಖ್ಯಮಂತ್ರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.



















