
ಕಾರ್ಕಳ ಜ.15. : ಕಾರ್ಕಳ ಬೈಪಾಸ್ ಬಜಗೋಳಿ ಮಾಳ ರಾಷ್ಟ್ರೀಯ ಹೆದ್ದಾರಿ 169ರ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯ ಭೂಸ್ವಾಧೀನ ಪರಿಹಾರದ ಕುರಿತು ಕಾರ್ಕಳ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಅವರು ಮಾಳ ಹಾಗೂ ಮುಡಾರು ಪರಿಸರದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಭೂ ಮಾಲೀಕರೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
ಕಾರ್ಕಳ ಬೈಪಾಸ್ ನಿಂದ ಮಾಳ ಗೇಟ್ ತನಕ ರಾಷ್ಟ್ರೀಯ ಹೆದ್ದಾರಿಯ ಚತುಷ್ಪತ ರಸ್ತೆ ಕಾಮಗಾರಿಯು ಪ್ರಗತಿಯಲ್ಲಿದ್ದು, ಕೆಲವು ಕಡೆಗಳಲ್ಲಿ ಭೂಸ್ವಾಧೀನ ಹಾಗೂ ಪರಿಹಾರದ ಕುರಿತು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಭೂ ಮಾಲೀಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ವಿಷಯದಲ್ಲಿ ಆಗಿರುವ ನ್ಯೂನ್ಯತೆಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ, ಭೂ ಸ್ವಾಧೀನ ಪರಿಹಾರ ಕುರಿತಂತೆ ಕೆಲವು ಕಡೆಗಳಲ್ಲಿ ಆಗಿರುವ ಸಮಸ್ಯೆಗಳನ್ನು ಸರಿಪಡಿಸಿಕೊಂಡು, ಭೂ ಮಾಲೀಕರಿಗೆ ಭೂ ಸ್ವಾಧೀನ ಆಗುವ ಜಾಗದ ಕುರಿತು ಹಾಗೂ ಪರಿಹಾರ ಮೊತ್ತಗಳ ಕುರಿತು ಸೂಕ್ತ ಮಾಹಿತಿ ನೀಡಿ, ಭೂ ಮಾಲೀಕರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಭೂ ಸ್ವಾಧೀನ ಅಧಿಕಾರಿ ಹಾಗೂ ಕುಂದಾಪುರ ಉಪವಿಭಾಗ ಸಹಾಯಕ ಕಮಿಷನರ್
ಕೆ. ಮಹೇಶ್ಚಂದ್ರ, ಕಾರ್ಕಳ ತಹಶೀಲ್ದಾರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಭೂ ಮಾಲೀಕರು ಉಪಸ್ಥಿತರಿದ್ದರು.




















