
ಬೆಂಗಳೂರು: ಬಿಜೆಪಿ ನಾಯಕರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧದ ಪ್ರೀತಿಸಿ ವಂಚಿಸಿದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣ ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ರಾಜಿ ಸಂಧಾನದ ಮೂಲಕ ವಿವಾದ ಬಗೆಹರಿಸಿಕೊಳ್ಳುವಂತೆ ಸೂಚಿಸಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು, ಪ್ರಕರಣಕ್ಕೆ ಸಂಬಂಧಿಸಿದ ಸಂತ್ರಸ್ತೆ, ಆರೋಪಿ ಹಾಗೂ ಇತರರು ಜೂನ್ 19ರಂದು ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗುವಂತೆ ನಿರ್ದೇಶನ ನೀಡಿದೆ.
ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ಅವರು ರಾಜಿ ಸಂಧಾನದ ಪ್ರಸ್ತಾಪ ಮುಂದಿಟ್ಟ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಆದೇಶ ನೀಡಿದೆ.
ಈ ನಡುವೆ, ಕೋರ್ಟ್ನಲ್ಲಿ ಠೇವಣಿ ಇಡಲಾಗಿದ್ದ ಮೊದಲ ತಿಂಗಳ ₹75 ಸಾವಿರವನ್ನು ಸಂತ್ರಸ್ತೆಗೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ಸೂಚಿಸಿದೆ. ಜೊತೆಗೆ, ಇನ್ನೂ ₹75 ಸಾವಿರವನ್ನು ನಾಲ್ಕು ದಿನಗಳೊಳಗೆ ಪಾವತಿಸಲು ಆರೋಪಿಗೆ ಆದೇಶಿಸಿದೆ.
ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 30ಕ್ಕೆ ನಿಗದಿಪಡಿಸಲಾಗಿದ್ದು, ಮಧ್ಯಸ್ಥಿಕೆ ಕೇಂದ್ರದ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

































