
ಲಕ್ನೋ: ಶುಕ್ರವಾರ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸಂಸದ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ಭೇಟಿ ನೀಡಿದ್ದಾರೆ.
ರಾಹುಲ್ ಗಾಂಧಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸುಲ್ತಾನ್ಪುರದಲ್ಲಿರುವ ಸಂಸದರು ಮತ್ತು ಶಾಸಕರ ನ್ಯಾಯಾಲಯಕ್ಕೆ ಹಾಜರಾಗಿ ವಾಪಸ್ ಲಕ್ನೋಗೆ ತೆರಳುವ ವೇಳೆ ರಸ್ತೆ ಬದಿಯಲ್ಲಿದ್ದ ಚಮ್ಮಾರ ರಾಮ್ ಚೈತ್ ಎಂಬವರ ಅಂಗಡಿಗೆ ಭೇಟಿ ನೀಡಿದ್ದಲ್ಲದೇ ಚಮ್ಮಾರನ ನಿರ್ದೇಶನದಂತೆ ಚಪ್ಪಲಿಯನ್ನು ಸರಿಪಡಿಸುವ ಪ್ರಯತ್ನವನ್ನೂ ಮಾಡಿ ಗಮನ ಸೆಳೆದಿದ್ದಾರೆ.
ಈ ಅಂಗಡಿಯಲ್ಲಿ ಸುಮಾರು 30 ನಿಮಿಷಗಳ ಕಾಲ ರಾಮ್ ಚೈತ್ ಜೊತೆ ಕಾಲ ಕಳೆದು ಮಾತುಕತೆ ನಡೆಸಿ ಕಷ್ಟಸುಖಗಳನ್ನೂ ಆಲಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಪಾನೀಯ ಸೇವಿಸಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ರಾಮ್ ಚೈತ್ ಅವರ ಸಮಸ್ಯೆಗಳನ್ನು ಪರಿಹರಿಸಲು ಬೇಕಾಗುವ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ











