
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು ಇದರ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿ & ಇತರರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿರುವ ರಾಜ್ಯ ಹೈಕೋರ್ಟ್, ಮುಂದಿನ ವಿಚಾರಣೆವರೆಗೂ ಕೇಂದ್ರಗಳನ್ನು ಸ್ಥಗಿತಗೊಳಿಸದಂತೆ ಮಧ್ಯಂತರ ಆದೇಶ ಹೊರಡಿಸಿದೆ.
ಸರ್ಕಾರದ ಈ ನಿರ್ಧಾರವು ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಔಷಧಿಗಳನ್ನು ಒದಗಿಸುತ್ತಿದ್ದ ಈ ಕೇಂದ್ರಗಳು ಸ್ಥಗಿತಗೊಂಡರೆ, ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗಲಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದರು.
ಹೀಗಾಗಿ ಸರ್ಕಾರದ ಆದೇಶವನ್ನು ಪ್ರಶ್ನಿಸಿ, ಸಂಸದ ತೇಜಸ್ವಿ ಸೂರ್ಯ ಮತ್ತು ಹಲವು ಜನೌಷಧಿ ಕೇಂದ್ರಗಳ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ತಡೆಯಾಜ್ಞೆಯಿಂದಾಗಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಔಷಧಿಗಳು ಲಭ್ಯವಾಗುವ ಸೌಲಭ್ಯ ಮುಂದುವರೆಯಲಿದ್ದು, ಜನಸಾಮಾನ್ಯರಿಗೆ ತಾತ್ಕಾಲಿಕವಾಗಿ ನಿರಾಳವಾಗಿದೆ.
ನ್ಯಾಯಾಲಯದ ಕ್ರಮವನ್ನು ಸ್ವಾಗತಿಸಿರುವ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸರ್ಕಾರದ ಜನಪರ ಕಾರ್ಯಗಳನ್ನು ವಿರೋಧಿಸುವ ಏಕೈಕ ಉದ್ದೇಶದಿಂದ ರಾಜ್ಯದ ಸಾರ್ವಜನಿಕರಿಗೆ ಸಂಕಷ್ಟ ನೀಗಿಸುವುದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ವ್ಯತಿರಿಕ್ತ ಅಭಿಪ್ರಾಯ ರೂಪಿಸುವ ಕಾರಣದಿಂದ ಕಾಂಗ್ರೆಸ್ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರಕ್ಕೆ ಬಂದಿದ್ದು, ಅದರ ಜನವಿರೋಧಿ ನೀತಿಯನ್ನು ವ್ಯಕ್ತಪಡಿಸುತ್ತದೆ. ನ್ಯಾಯಾಲಯದ ಕ್ರಮವು ರಾಜ್ಯ ಸರ್ಕಾರಕ್ಕೆ ದೊಡ್ಡ ಮುಖಭಂಗವಾಗಿದ್ದು, ಜನವಿರೋಧಿ ಕ್ರಮಗಳಿಗೆ ತಡೆ ನೀಡುವ ವಿಕೃತ ಮನೋಭಾವಕ್ಕೆ ಚಾಟಿ ಏಟು ಕೊಟ್ಟಂತಾಗಿದೆ ಎಂದು ತಿಳಿಸಿದರು.