
ಮಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎಂಎಲ್ಸಿ ಮಂಜುನಾಥ್ ಭಂಡಾರಿ ದಕ್ಷಿಣ ಕನ್ನಡದಲ್ಲಿ ಡ್ರಗ್ಸ್ ದಂಧೆ ಕಡಿವಾಣಕ್ಕೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಈ ಬಾರಿಯ ವಿಧಾನ ಪರಿಷತ್ ಅಧಿವೇಶನದಲ್ಲಿ ದನಿ ಎತ್ತುತ್ತೇವೆ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಡ್ರಗ್ಸ್ ದಂಧೆ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಗೊಳಿಸಲು ಈ ಬಾರಿಯ ವಿಧಾನ ಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ. ಡ್ರಗ್ಸ್ ದಂಧೆಯಲ್ಲಿ ತೊಡಗಿದವರನ್ನು ಬಂಧಿಸಿದ್ದರೂ ಅವರು ಜಾಮೀನು ಪಡೆದು ಹೊರಗೆ ಬಂದು ಮತ್ತೆ ಅದೇ ಡ್ರಗ್ಸ್ ದಂಧೆ ಮಾಡುತ್ತಿರುವುದು ಕಂಡು ಬಂದಿದೆ. ಡ್ರಗ್ಸ್ ದಂಧೆಗೆ ಬಹಳ ಸಣ್ಣ ಕೇಸ್ಗಳು ಇರುವುದರಿಂದ ನಾವೇನು ಮಾಡಲು ಸಾಧ್ಯವಿಲ್ಲ ಎಂದು ಪೊಲೀಸರು ಅಳಲು ತೋಡಿಕೊಂಡಿದ್ದು ಈ ಬಗ್ಗೆ ಕಠಿಣ ಕ್ರಮ ಜಾರಿಯಾಗಬೇಕಾದರೆ ಕಾನೂನಿನಲ್ಲಿ ತಿದ್ದುಪಡಿ ಮಾಡಿದ್ದಲ್ಲಿ ಮಾತ್ರ ಸಾಧ್ಯ ಎಂದರು.
ಅವಿಭಜಿತ ದ.ಕ.ಜಿಲ್ಲೆಯಲ್ಲಿನ ಡ್ರಗ್ಸ್ ದಂಧೆಗೆ ಕಡಿವಾಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಪತ್ರ ಬರೆದಿದ್ದೆ. ಗೃಹಮಂತ್ರಿ, ಐಜಿ, ಪೊಲೀಸ್ ಕಮಿಷನರ್ಗೆ ಪತ್ರ ಬರೆದಿದ್ದು ಡ್ರಗ್ಸ್ ದಂಧೆಯ ಕರಾಳತೆ ಎಷ್ಟರಮಟ್ಟಿಗೆ ಹೋಗಿದೆ ಎಂದರೆ ಇಲ್ಲಿನ ಕಾಲೇಜುಗಳಲ್ಲಿ ಅಡ್ಮಿಷನ್ ಸಂಖ್ಯೆ ಕುಂಠಿತಗೊಳ್ಳುತ್ತಿದೆ. ಡ್ರಗ್ಸ್ ದಂಧೆಯನ್ನು ಡಿಜಿಯವರು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.






















































