
ಬೆಂಗಳೂರು: ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಗಿರೀಶ್ ಕುಮಾರ್ ಮತ್ತು ಗೌರವ್ ಎಂಬವರು ಸಲ್ಲಿಸಿದ್ದ ಪಿಐಎಲ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.
ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾ. ವಿಭು ಬಕ್ರು ಹಾಗೂ ನ್ಯಾ. ಸಿ.ಎಂ. ಜೋಶಿ ನೇತೃತ್ವದ ವಿಭಾಗೀಯ ಪೀಠವು ದಸರಾ ಉದ್ಛಾಟನೆಗೆ ಬಾನು ಮುಷ್ತಾಕ್ ಆಯ್ಕೆಯಿಂದ ಯಾವುದೇ ಹಕ್ಕು ಉಲ್ಲಂಘನೆಯಿಲ್ಲ ಎಂದು ಹೇಳಿ ಪಿಐಎಲ್ ಅರ್ಜಿಗಳನ್ನು ಪೀಠ ವಜಾಗೊಳಿಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಸುದರ್ಶನ, ಬಾನು ಮುಷ್ತಾಕ್ ಅವರು ಕನ್ನಡ ಮತ್ತು ಹಿಂದೂಗಳ ವಿರುದ್ಧವಾಗಿ ಮಾತನಾಡಿದ್ದಾರೆ. ಭುವನೇಶ್ವರಿ ಕಾರ್ಯಕ್ರಮದಲ್ಲಿ ಮಾತನಾಡುವಾಗ ಕುಂಕುಮದ ಬಗ್ಗೆ ಮಾತನಾಡಿದ್ದಾರೆ. ದಸರಾ ಹಿಂದೂ ಧರ್ಮದ ಆಚರಣೆ. ಉದ್ಘಾಟನೆಗೆ ಬಂದವರು ಹೂವಿನ ಅಭಿಷೇಕ ಮಾಡಬೇಕು. ದಸರಾ ಉದ್ಘಾಟನೆಯಲ್ಲಿ ಸಾಕಷ್ಟು ಧಾರ್ಮಿಕ ಕೆಲಸ ಇವೆ. ಅವರ ಆಯ್ಕೆ ಸರಿಯಲ್ಲ ಎಂದು ವಾದ ಮಂಡಿಸಿದ್ದು ಇದಕ್ಕೆ ನ್ಯಾಯಮೂರ್ತಿಗಳು, ವಾಕ್ ಸ್ವಾತಂತ್ರ್ಯದ ಬಗ್ಗೆ ಪ್ರಶ್ನೆ ಮಾಡಲು ಹೇಗೆ ಸಾಧ್ಯ? ನಿಮ್ಮ ಅಭಿಪ್ರಾಯವನ್ನು ಕೂಡಾ ಸೂಕ್ತ ವೇದಿಕೆಯಲ್ಲಿ ಹೇಳಬಹುದು. ಆದರೆ ಸಂವಿಧಾನ ನೀಡಿರುವ ಯಾವ ಹಕ್ಕು ಉಲ್ಲಂಘನೆಯಾಗಿದೆ ಹೇಳಿ? ಸಂವಿಧಾನದ 26ನೇ ಹಕ್ಕು ಇಲ್ಲಿ ಹೇಗೆ ಉಲ್ಲಂಘನೆಯಾಗಲಿದೆ ಎಂದು ಪ್ರಶ್ನೆ ಮಾಡಿದರು.
ಬಾನು ಮುಷ್ತಾಕ್ ಧರ್ಮದಲ್ಲಿ ವಿಗ್ರಹ ಪೂಜೆ ಅನ್ನೋದು ಇಲ್ಲ. ಹಿಂದೂ ಧರ್ಮದಲ್ಲಿ ವಿಗ್ರಹ ಪೂಜೆಗೆ ಹೆಚ್ಚಿನ ಮಹತ್ವ ಇದೆ. ಹಿಂದೂ ವಿರೋಧಿ ಹೇಳಿಕೆ ನೀಡಿದವರು ಹೇಗೆ ಉದ್ಘಾಟನೆ ಮಾಡ್ತಾರೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದಾಗ ಇದಕ್ಕೆ ಪೀಠವು ಆ ಪ್ರಶ್ನೆ ಇಲ್ಲಿ ಇಲ್ಲ. ನಂಬಿಕೆ ಇಲ್ಲದವರು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಬಾರದು ಎಂದು ದೇವಸ್ಥಾನ ಅಥವಾ ಟ್ರಸ್ಟಿ ಯಾರೂ ನಮ್ಮ ಮುಂದೆ ಇಲ್ಲ ಎಂದು ಹೇಳಿ ಪೀಠವು ಅರ್ಜಿಗಳನ್ನು ವಜಾಗೊಳಿಸಿದೆ.













