
ಕಾರ್ಕಳ: ಕುಂದಾಪುರ–ಉಡುಪಿ ಉಪವಿಭಾಗದ ಸಹಾಯಕ ಆಯುಕ್ತೆ ಹಾಗೂ ಕಾರ್ಯನಿರ್ವಾಹಕ ದಂಡಾಧಿಕಾರಿ ರಶ್ಮಿ ಎಸ್.ಆರ್. ಕೆ.ಎ.ಎಸ್. ಜೂನ್ 19ರಂದು ಬೆಳ್ಳಣ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದು ಈ ವೇಳೆ ವಿದ್ಯಾರ್ಥಿಗಳು ಕೇವಲ ಪಠ್ಯ ಶಿಕ್ಷಣಕ್ಕೆ ಸೀಮಿತರಾಗದೇ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಿದರೆ ಮಾತ್ರ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.
ವಿದ್ಯಾರ್ಥಿ ಜೀವನದಲ್ಲಿ ಉತ್ಸಾಹ, ಚೈತನ್ಯ ಹಾಗೂ ಸಂತೋಷದ ಮನೋಭಾವ ಅತ್ಯಂತ ಮುಖ್ಯವಾಗಿದ್ದು, ಅದನ್ನು ವಿದ್ಯಾರ್ಥಿ ಜೀವನದ ಜೊತೆಗೆ ಮುಂದಿನ ಕರ್ತವ್ಯ ಜೀವನದಲ್ಲಿಯೂ ಮುಂದುವರಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆದಿಂಜೆ ಕೂಟಾಯಿ ಸೂರ್ಯಕಾಂತ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ಸದಸ್ಯರಾದ ಬಾಲಚಂದ್ರ ಶೆಟ್ಟಿ, ವೆಂಕಟರಾಯ ಕಾಮತ್, ಮೋಹನದಾಸ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಹಾಸ್ ಹೆಗ್ಡೆ, ಆಲ್ವಿನ್ ನೇರಿ ಪಿಂಟೋ, ಸುಕುಮಾರ ಶೆಟ್ಟಿ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗೋಪಾಲ್, ಉಪನ್ಯಾಸಕ ವಿಜಯ ಕುಮಾರ್ ಹಾಗೂ ವಿದ್ಯಾರ್ಥಿ ನಾಯಕರಾದ ಪ್ರೇರಣ್ ಮತ್ತು ದಶಮಿ ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಪ್ರಾಚಾರ್ಯ ವಿನ್ಸೆಂಟ್ ಡಿಸೋಜಾ ಸ್ವಾಗತಿಸಿದರು. ಬಳಿಕ ವಿಜಯ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರೆ, ಕಾರ್ಯಕ್ರಮವನ್ನು ಉಪನ್ಯಾಸಕ ಮಾಧವ ನಿರೂಪಿಸಿದರು.

































