
ಮಂಗಳೂರು: ಖಾಸಗಿ ವಾಹಿನಿಯೊಂದರ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ವರದಿಗಾರ ಹರೀಶ್ ಅವರು ಗಿರೀಶ್ ಮಟ್ಟಣನವರ್ ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದು ಈ ಹಿನ್ನೆಲೆ ಈ ಮೂವರ ವಿರುದ್ಧ ಬಿಎನ್ಎಸ್ ಸೆಕ್ಷನ್ 115(2), 189(2), 191(2), 351(2), 352, 190 ಅಡಿ ಎಫ್ಐಆರ್ ದಾಖಲಾಗಿದೆ.
ಬುಧವಾರ ಧರ್ಮಸ್ಥಳದಲ್ಲಿ ಯೂಟ್ಯೂಬರ್ಗಳ ಮೇಲೆ ಹಲ್ಲೆ ನಡೆದ ವಿಚಾರ ತಿಳಿದ ಹಿನ್ನೆಲೆಯಲ್ಲಿ ನಾನು ಹಲ್ಲೆಗೆ ಒಳಗಾದವರನ್ನು ಮಾತನಾಡಿಸಲು ಉಜಿರೆಯ ಬೆನಕ ಆಸ್ಪತ್ರೆಗೆ ಬಂದಿದ್ದ ಸಂದರ್ಭದಲ್ಲಿ ಗಿರೀಶ್ ಮಟ್ಟಣವರ್ ಬಳಿ ಬೈಟ್ ಕೊಡುವಂತೆ ಕೇಳಿದಾಗ ನನಗೆ ಬೈಯಲು ಆರಂಭಿಸಿದರು.
ಈ ವೇಳೆ ಅಲ್ಲೇ ಇದ್ದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಗ್ಯಾಂಗ್ ಸದಸ್ಯರು ಹಲ್ಲೆ ಮಾಡಿ ಕೀಳು ಭಾಷೆಯಿಂದ ನಿಂದಿಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಸಮೀರ್ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಪೊಲೀಸರು ನನ್ನನ್ನು ರಕ್ಷಣೆ ಮಾಡಿ ಒಳಗೆ ಕೂರಿಸಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಜಯಂತ್ ಟಿ ನನ್ನ ವಿಡಿಯೋ ಮಾಡಿ ಹಲ್ಲೆ ಮಾಡಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.














































