
ಹೆಬ್ರಿ :ಬಾಲ್ಯದ ದಿನಗಳಲ್ಲಿ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದು ವಿದ್ಯಾರ್ಥಿಗಳ ಜವಾಬ್ದಾರಿಯಾಗಿರುತ್ತದೆ. ಬಾಹ್ಯ ಪ್ರಚೋದನೆಗೆ ಒಳಗಾಗದೆ ಮಾನಸಿಕವಾಗಿ, ದೈಹಿಕವಾಗಿ ಸ್ಥಿರತೆಯನ್ನು ಕಾಪಾಡಿಕೊಂಡಾಗ ನಮ್ಮ ಜೀವನವು ಸುಂದರವಾಗುತ್ತದೆ. ಯಾವುದೋ ಒತ್ತಡಕ್ಕೆ ಬಲಿಯಾಗಿ ದುಶ್ಚಟಗಳಿಗೆ ದಾಸರಾಗಿ ಆರೋಗ್ಯವನ್ನು ಹಾಳುಮಾಡಿಕೊಳ್ಳಬೇಡಿ.ನಿಮ್ಮ ಜೀವನದ ಬಗ್ಗೆ ಕಾಳಜಿ ವಹಿಸುವ ತಂದೆ ತಾಯಿಗಳ, ಗುರು ಹಿರಿಯರ ಮಾರ್ಗದರ್ಶನವನ್ನು ಸದಾ ಪಡೆಯುತ್ತಾ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಎನ್ ಸಿಡಿ ವಿಭಾಗದ ಆಪ್ತ ಸಮಾಲೋಚಕಿ ಪವಿತ್ರಾ ಹೇಳಿದರು.
ಅವರು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಹಾಗೂ ಆಪ್ತ ಸಮಾಲೋಚನಾ ಘಟಕದ ವತಿಯಿಂದ ನಡೆದ “ಹದಿಹರೆಯದ ಮಕ್ಕಳು ಎದುರಿಸುವ ಸವಾಲುಗಳು “ವಿಷಯದ ಕುರಿತು ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದರು.ಆರೋಗ್ಯ ಕೇಂದ್ರದ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕಿ ಸರಸ್ವತಿ, ವಿದ್ಯಾರ್ಥಿ ನಾಯಕ ಕಾರ್ತಿಕ್ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿನಿ ಅಂಜಲಿ ಕಾರ್ಯಕ್ರಮ ನಿರೂಪಿಸಿ, ಶೋಭಿತ್ ಯು. ಪೂಜಾರಿ ವಂದಿಸಿದರು. ಶಿಕ್ಷಕರಾದ ಶ್ಯಾಮಲಾ, ಚಂದ್ರಕಾಂತಿ ಹೆಗ್ಡೆ, ಮಹೇಶ್ ನಾಯ್ಕ್ ಸಹಕರಿಸಿದರು.





















































