
ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ 458 ಕೋಟಿ ರು. ಮೌಲ್ಯದ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ಮತ್ತು ಶೋಷಿತ- ದಮನಿತ- ಶೂದ್ರ ಜನ ಸಮುದಾಯಗಳ ಸ್ವಾಭಿಮಾನಿ ಸಮಾವೇಶ ಉದ್ಘಾಟಿಸಿ ಶನಿವಾರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಪ್ರಕರಣ ಮುಂದಿಟ್ಟುಕೊಂಡು ತಮ್ಮ ರಾಜೀನಾಮೆಗೆ ಪಟ್ಟುಹಿಡಿದಿರುವ ಜೆಡಿಎಸ್ -ಬಿಜೆಪಿ ವಿರುದ್ಧ ಇದೀಗ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿದ್ದು ‘ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ವಿಪಕ್ಷಗಳು ರಾಜಕಾರಣಕ್ಕೆ ಎಳೆದು ತಂದಿವೆ. ಆ ಪಕ್ಷಗಳನ್ನು ನೀವು ಕ್ಷಮಿಸ್ತೀರಾ?’ ಎಂದು ಪ್ರಶ್ನಿಸಿದ್ದಾರೆ.
ಕುರಿಕಾಯುವವನ ಪುತ್ರ ಮುಖ್ಯಮಂತ್ರಿಯಾಗಿದ್ದನ್ನು ಸಹಿಸಲಾಗದೆ ನನ್ನ ವಿರುದ್ಧ ವಿನಾಕಾರಣ ಆರೋಪ ಮಾಡಿ, ಸಕಾರಣವಿಲ್ಲದೆ ನಿತ್ಯ ರಾಜೀನಾಮೆ ಕೊಡಿ ಎಂದು ಕೇಳುತ್ತಿದ್ದಾರೆ. ಇದರಿಂದ ನನಗೂ ಸಾಕಾಗಿ ಹೋಗಿದೆ. ಆದರೂ ನಿಮಗಾಗಿ ಹೋರಾಟ ಮಾಡುವೆ ಎಂದು ಹೇಳಿದ ಸಿಎಂ ಬಿಜೆಪಿ- ಜೆಡಿಎಸ್ನ ಕಪಟಗಳ ಷಡ್ಯಂತ್ರಕ್ಕೆ ಈ ಸ್ವಾಭಿಮಾನ ಸಮಾವೇಶದ ಮುಖಾಂತರ ತಕ್ಕ ಪಾಠ ಕಲಿಸಲು ಸಿದ್ಧರಾಗಿ ಎಂದು ಸಭಿಕರಿಗೆ ಕರೆ ನೀಡಿದರು.
ನನ್ನ ಮೇಲಿನ ಹೊಟ್ಟೆಕಿಚ್ಚಿಗೆ ನನ್ನ ಪತ್ನಿಯನ್ನು ಎಳೆಯಬೇಕಿತ್ತಾ? ಆಕೆ ಏನು ತಾನೆ ತಪ್ಪು ಮಾಡಿದ್ದಾಳೆ ಎಂದು ಪ್ರಶ್ನಿಸಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅವರ ಮಗ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕುರಿಗಾಯಿ ಮಗ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದು ಮತ್ತು ನನ್ನ ಏಳಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರತಿನಿತ್ಯ ಒಂದಲ್ಲ ಒಂದು ಸುಳ್ಳು ಆರೋಪ ಮಾಡುತ್ತಾ, ನನ್ನ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.













