
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ನ ಕೆಲ ನಾಯಕರು ಅನೌಪಚಾರಿಕವಾಗಿ ಭೇಟಿ ಮಾಡಿ ಗ್ಯಾರಂಟಿ ಯೋಜನೆಗಳಿಗೆ ಜನರ ಮನ್ನಣೆ ದೊರಕಿಲ್ಲ ಎಂಬ ಕಾರಣ ನೀಡಿ ಚರ್ಚೆ ನಡೆಸಿದ್ದು, ಈ ವೇಳೆ ಗ್ಯಾರಂಟಿ ಯೋಜನೆ ಬಗ್ಗೆ ಪುನರ್ ಪರಿಶೀಲನೆ ನಡೆಯಬೇಕು ಎಂಬ ಅಭಿಪ್ರಾಯವನ್ನು ಬಹುತೇಕ ಶಾಸಕರು ಹೊಂದಿದ್ದಾರೆ ಎಂದು ಮುಖ್ಯಮಂತ್ರಿಯವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪದೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲಾಗದು ಎಂದು ಹೇಳಿದ್ದಾರೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.
ಚುನಾವಣಾ ಫಲಿತಾಂಶದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 15ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲುವ ನಿರೀಕ್ಷೆ ಹೊಂದಿದ್ದೆವು. ಆದರೆ, ಒಂದು ಸ್ಥಾನದಿಂದ 9 ಸ್ಥಾನ ಗೆಲ್ಲುವ ಮೂಲಕ ಪಕ್ಷ ಉತ್ತಮ ಸಾಧನೆಯನ್ನೇ ಮಾಡಿದೆ. ಅಲ್ಲದೆ, 2019ಕ್ಕಿಂತ ಈ ಬಾರಿ ಶೇ.14ರಷ್ಟು ಮತ ಗಳಿಕೆ ಹೆಚ್ಚಾಗಿದೆ. ರಾಜ್ಯದಲ್ಲಿ ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬಂದಿಲ್ಲ. 20 ಸ್ಥಾನಗಳವರೆಗೆ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ನಿರೀಕ್ಷೆ ಹೊಂದಿದ್ದೆವು. ಆದರೆ, 9 ಸ್ಥಾನಗಳಲ್ಲಿ ಗೆಲುವು ಸಾಧಿಸಲಷ್ಟೇ ಸಾಧ್ಯವಾಗಿದೆ ಎಂದು ಹೇಳಿದರು.