
ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ವರ್ಷದ ಏಪ್ರಿಲ್ನಿಂದ ಅಕ್ಟೋಬರ್ವರೆಗೆ 7 ತಿಂಗಳಲ್ಲೇ 326 ಬಾಣಂತಿಯರು ಸಾವನ್ನಪ್ಪಿದ್ದು ಈ ಪೈಕಿ ಬೆಂಗಳೂರು ನಗರ ಒಂದರಲ್ಲೇ 51 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
326 ಸಾವು ಪೈಕಿ ಶೇ.80ರಷ್ಟು ಮರಣ ಸರ್ಕಾರಿ ಆಸ್ಪತ್ರೆಗಳಲ್ಲೇ ಸಂಭವಿಸಿದ್ದು 64 ಸಾವು (ಶೇ.20) ಮಾತ್ರ ಖಾಸಗಿ ಆಸ್ಪತ್ರೆಗಳಲ್ಲಿ ಉಂಟಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಕಳೆದ 2 ತಿಂಗಳಲ್ಲೇ 51 ಮಂದಿ ಸಾವನ್ನಪ್ಪಿದ್ದು, ಈ ಪೈಕಿ 50 ಮಂದಿ ಸರ್ಕಾರಿ ಆಸ್ಪತ್ರೆಗಳಲ್ಲೇ ಸಾವನ್ನಪ್ಪಿರುವುದು ಪ್ರಸಕ್ತ ಸಾಲಿನ ವೈದ್ಯಕೀಯ ಸೇವೆ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ.
ಬಾಣಂತಿಯರು ಮತ್ತು ಶಿಶುಗಳು ಹೆಚ್ಚಿನ ಪ್ರಮಾಣದಲ್ಲಿ ಸಾವಿಗೀಡಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನಗರದ ಬಿಮ್ಸ್ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ್ದು ಸತ್ಯಾಂಶ ತಿಳಿಯಲು ಇಲ್ಲಿಗೆ ಬಂದಿದ್ದೇವೆ. ಆಸ್ಪತ್ರೆ ಭೇಟಿಯಲ್ಲಿ ಯಾವುದೇ ರಾಜಕಾರಣದ ಪ್ರಶ್ನೆಯೇ ಇಲ್ಲ. ಇವತ್ತು ಬಡವರಿಗೆ ಅನ್ಯಾಯ ಆಗುತ್ತಿದೆ. ಬಾಣಂತಿಯರು, ಹಸುಗೂಸುಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಾಣುತ್ತಿದ್ದು ಇದನ್ನು ಸದನದಲ್ಲಿ ಚರ್ಚಿಸುತ್ತೇವೆ ಎಂದು ಹೇಳಿದರು.



















