
ವಿಧಾನ ಪರಿಷತ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಗೃಹ ಆರೋಗ್ಯ ಯೋಜನೆ ಮೂಲಕ ಅಸಾಂಕ್ರಾಮಿಕ ರೋಗ ಪತ್ತೆ ಮತ್ತು ಹೃದಯಾಘಾತ ಕಾರಣವಾದ ಅಂಶಗಳ ಪತ್ತೆಗೆ 30 ವರ್ಷ ಮೇಲ್ಪಟ್ಟವರಿಗೆ ತಪಾಸಣೆ ಮಾಡಲು ರಾಜ್ಯದ ಎಲ್ಲ ತಾಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆಗೆ ಕ್ರಮ ವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಅತ್ಯಾಧುನಿಕವಾದ ಕ್ಯಾತ್ಲ್ಯಾಬ್ ವ್ಯವಸ್ಥೆಯನ್ನು ಮಂಗಳೂರು, ಬೆಂಗಳೂರಿನ ಸಿ.ವಿ.ರಾಮನ್ ನಗರ ಹಾಗೂ ಹೊಸಪೇಟೆಯಲ್ಲಿ ಕಲ್ಪಿಸಲು ಉದ್ದೇಶಿಸಲಾಗಿದೆ. ಡಾ.ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕ್ಷೇತ್ರಗಳಿಗೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ. ತೀವ್ರ ಹೃದಯಾಘಾತ ಸಂಭವಿಸಿದಾಗ ಕೊರೊನರಿ ಸ್ಟಂಟ್ ಮತ್ತು ಕಾರ್ಡಿಯಾಕ್ ಬೈಪಾಸ್ ಸರ್ಜರಿಗಳಿಗೆ ಸೂಪರ್ ಸ್ಪೆಷಾಲಿಟಿ ತಜ್ಞರ ಅವಶ್ಯಕತೆ ಇರುವುದರಿಂದ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ (ಎಬಿಎಕೆ) ಯೋಜನೆಯಡಿ ನೋಂದಣಿ ಹೊಂದಿರುವ ತೃತೀಯ ಹಂತದ ಆಸ್ಪತ್ರೆಗಳಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.



















