“ಸಂಸದೆಗೆ ನಿಮ್ಹಾನ್ಸ್ ನಲ್ಲಿ ಮಾನಸಿಕ ಚಿಕಿತ್ಸೆ ಕೊಡಿ”, ಪ್ರಧಾನಿಗೆ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ ಯುವ ಕಾಂಗ್ರೆಸ್

ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ಸಂಸದೆ ಕಂಗನಾ ರನೌತ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದರ ವಿರುದ್ಧ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ರಾಹುಲ್ ಗಾಂಧಿ ಮಹಿಳಾ ಸಂಸದರಿಗೆ ಮುಜುಗರ ವಾಗುವ ರೀತಿ ನಡೆದುಕೊಳ್ಳುತ್ತಾರೆ. ತಪೋರಿಯಂತೆ ವರ್ತಿಸುತ್ತಾರೆ. ಮಹಿಳೆಯರ ವಿಷಯವನ್ನು ಹಗ್ಗದ ಪ್ರಚಾರಕ್ಕೆ ಬಳಸಿಕೊಳ್ಳುತ್ತಾರೆ ಎಂದು ಸಂಸದೆ ಟೀಕಿಸಿದ್ದು, ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಯುವ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಇವರನ್ನು ಕೂಡಲೇ ನಿಮ್ಹಾನ್ಸ್ ಗೆ ಕಳುಹಿಸಿಕೊಡಿ , ಚಿಕಿತ್ಸೆಯ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ತಿಳಿಸಿದೆ.
ಸಂಸದೆಗೆ ಸಾರ್ವಜನಿಕ ವೇದಿಕೆಯಲ್ಲಿ ಹೇಗೆ ವರ್ತಿಸಬೇಕು ಎಂಬ ಕನಿಷ್ಠ ಜ್ಞಾನವಿಲ್ಲ. ಸಾಂವಿಧಾನಿಕ ಹುದ್ದೆಯಲ್ಲಿರುವ ಕಾಂಗ್ರೆಸ್ ನಾಯಕನ ವಿರುದ್ಧ ಕೀಳು ಮಟ್ಟದ ಭಾಷೆ ಬಳಸಿರುವುದು ಖಂಡನೀಯ. ಇದು ಆಕೆಯ ಮಾನಸಿಕ ಅಸಮತೋಲನವನ್ನು ತೋರಿಸುತ್ತದೆ. ಈ ಕೂಡಲೇ ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.






















































