
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ಐದು ಲಕ್ಷ ರು. ನೀಡುವುದಾಗಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿದ್ದು ಇದೀಗ ಅವರ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಹೈಕೋರ್ಟ್ ರಾಜಕಾರಣಿಗಳು ವಿವಿಧ ಧರ್ಮೀಯರ ಮಧ್ಯೆ ಸಹಬಾಳ್ವೆ ಮೂಡಿಸುವಂಥ ಕ್ರಾಂತಿಕಾರಕ ಕೆಲಸ ಮಾಡಬೇಕೇ ಹೊರತು ಸಮಾಜಕ್ಕೆ ಉಪಯೋಗವಿಲ್ಲದ ದ್ವೇಷ ಭಾವನೆ ಮೂಡಿಸುವ ಕೆಲಸವನ್ನಲ್ಲ ಎಂದು ಖಾರವಾಗಿ ಹೇಳಿದೆ.
ಕೋಮು ಸಂಘರ್ಷಕ್ಕೆ ಪ್ರೇರಣೆ ನೀಡಿದ ಆರೋಪದ ಮೇಲೆ ಕೊಪ್ಪಳ ಟೌನ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಪೀಠವು ಈ ರೀತಿ ಹೇಳಿದ್ದು ಅಲ್ಲದೆ ಪೊಲೀಸರು ಯತ್ನಾಳ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು. ತನಿಖೆಗೆ ಯತ್ನಾಳ್ ಸಹಕಾರ ನೀಡಬೇಕು ಎಂದು ಪೀಠ ಮಧ್ಯಂತರ ಆದೇಶ ನೀಡಿತು.
ಇದಕ್ಕೂ ಮುನ್ನ ಯತ್ನಾಳ್ ಪರ ವಕೀಲರು, ಕಾನೂನಿನಲ್ಲಿ ಅಂತರ್ ಧರ್ಮೀಯ ವಿವಾಹಗಳಿಗೆ ನಿಷೇಧವಿಲ್ಲ. ಭಾರತ ಜಾತ್ಯತೀತ ದೇಶವಾಗಿದೆ. ಹೀಗಿರುವಾಗ, ಅರ್ಜಿದಾರರ ಹೇಳಿಕೆ ಯಾರಿಗೋ ಇಷ್ಟವಾಗಿಲ್ಲ ಎಂದ ಮಾತ್ರಕ್ಕೆ ಅದು ಅಪರಾಧ ಹೇಗಾಗುತ್ತದೆ? ಎಂದು ಆಕ್ಷೇಪಿಸಿದ್ದು ಇದಕ್ಕೆ ಉತ್ತರಿಸಿದ ನ್ಯಾಯಮೂರ್ತಿಗಳು, ಭಾರತವು ವೈವಿಧ್ಯಮಯ ದೇಶ. ನೂರಾರು ವರ್ಷಗಳ ಹಿಂದೆ ಕಾರಣಾಂತರಗಳಿಂದ ಒಂದು ಧರ್ಮದವರು, ಮತ್ತೊಂದು ಧರ್ಮದ ಜನ ಬದುಕಲೇಬಾರದು ಎಂದು ಭಾವಿಸುತ್ತಿದ್ದರು. ಒಂದು ಸಮುದಾಯದವರು ಮತ್ತೊಂದು ಸಮುದಾಯದ ವಿರುದ್ಧ ಹೋರಾಡುತ್ತಿದ್ದರು. ಆದರೆ, ಆ ಕಾರಣಗಳು ಈಗ ಪ್ರಸ್ತುತವಲ್ಲ. ಅಂದಿನ ಕಾರಣಗಳನ್ನು ಈಗ ಅನ್ವಯಸಲಾಗದು ಎಂದು ತೀಕ್ಷ್ಣವಾಗಿ ಹೇಳಿದರು.
ರಾಜಕಾರಣಿಗಳು ಜಾತಿ ತಾರತಮ್ಯ, ಮಹಿಳೆಯರ ಶೋಷಣೆ ತೊಡೆದು ಹಾಕಲು ಕಾರ್ಯೋನ್ಮುಖವಾಗಬೇಕು. ಸಾಮರಸ್ಯಕ್ಕೆ ಧಕ್ಕೆ ತರುವಂಥ ಕೆಲಸಗಳಿಗೆ ಮಹತ್ವ ನೀಡಬಾರದು. ಈ ಕುರಿತು ನಿಮ್ಮ ಕಕ್ಷಿದಾರರಿಗೆ ಸಲಹೆ ನೀಡಬೇಕು ಎಂದು ಯತ್ನಾಳ್ ಪರ ವಕೀಲರಿಗೆ ನ್ಯಾಯಮೂರ್ತಿಗಳು ತಿಳಿಸಿದರು.



















