
ಶಿವಮೊಗ್ಗ : ಗೃಹ ಸಚಿವ ಜಿ.ಪರಮೇಶ್ವರ್ ನಗರದಲ್ಲಿ ಪೊಲೀಸ್ ಇಲಾಖೆಯು ನೂತನವಾಗಿ ನಿರ್ಮಿಸಿರುವ ಜಿಲ್ಲಾ ಪೊಲೀಸ್ ಭವನವನ್ನು ಉದ್ಘಾಟಿಸಿದ ಬಳಿಕ ಶಿವಮೊಗ್ಗ ಜಿಲ್ಲಾ ವಿಮರ್ಶನಾ ಸಭೆಯಲ್ಲಿ ಮಾತನಾಡಿ, ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಸುಳ್ಳು ಸುದ್ದಿ, ವಿವಾದಾತ್ಮಕ ಪೋಸ್ಟ್ಗಳನ್ನು ಪ್ರಕಟಿಸುವರ ಮೇಲೆ ನಿಗಾವಹಿಸಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಿದರು.
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಮಕ್ಕಳ ಓದಿಗಾಗಿ ಗ್ರಂಥಾಲಯಗಳಲ್ಲಿ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಬೇಕು.
ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವರಿಗೆ ವಿವಿಧ ವಿಷಯಗಳ ಅವಶ್ಯಕ ಪುಸ್ತಕಗಳನ್ನು ಒದಗಿಸಿ. ಪೊಲೀಸ್ ಇಲಾಖೆ ಸರ್ಕಾರದ ಮುಖ. ಅಧಿಕಾರಿ ಮತ್ತು ಸಿಬ್ಬಂದಿಗಳು ಚೆನ್ನಾಗಿ ಕೆಲಸ ಮಾಡಿ, ಅಪರಾಧ ಪ್ರಕರಣಗಳನ್ನು ನಿಯಂತ್ರಣಕ್ಕೆ ತಂದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ನಮ್ಮ ಇಲಾಖೆಯ ಮೇಲೆ ಹೆಚ್ಚು ಜವಾಬ್ಧಾರಿ ಇದೆ ಎಂದು ತಿಳಿಸಿದರು. ಬಡವರ ಪರ ಸರ್ಕಾರ ನಮ್ಮದು. ಸಮಾಜದಲ್ಲಿ ಬಡವರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕೆಲಸವಾಗಬೇಕು. ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ. ಪ್ರಕರಣ ದಾಖಲಿಸುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಿ, ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಬೇಕು.
ಶಿಕ್ಷೆ ಆಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಕೊಪ್ಪಳದಲ್ಲಿ ನಡೆದಿದ್ದ ಘಟನೆಯಲ್ಲಿ ಒಂದೇ ಪ್ರಕರಣದಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯಾಗಿರುವ ಪ್ರಕರಣವನ್ನು ಮಾದರಿಯಾಗಿ ತೆಗೆದುಕೊಂಡು ಕರ್ತವ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.


ವಿವಿಧ ಆಚರಣೆಗಳ ಸಂದರ್ಭದಲ್ಲಿ ವಿವಾದಾತ್ಮಕ ಫ್ಲೆಕ್ಸ್, ಬ್ಯಾನರ್ಗಳನ್ನು ಹಾಕುತ್ತಿದ್ದಾರೆ. ಈ ಬಗ್ಗೆ ನಿಗಾವಹಿಸಬೇಕು. ಸಂಬಂಧಪಟ್ಟವರಿಗೆ ಎಚ್ಚರಿಸಿ ಕ್ರಮ ತೆಗೆದುಕೊಂಡರೆ ವಿವಾದಗಳು ಸೃಷ್ಟಿಯಾಗುವುದಿಲ್ಲ. ಸೈಬರ್ ಕ್ರೈಂ, ಡ್ರಗ್ಸ್ ಪ್ರಕರಣಗಳು ಪೊಲೀಸ್ ಇಲಾಖೆಗೆ ಸವಲಾಗಿ ಪರಿಣಮಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಿಬ್ಬಂದಿಗಳನ್ನು ನೀಡಿ ಸಿಇಎನ್ ಠಾಣೆಗಳ ಬಲವರ್ಧಿಸಲಾಗುವುದು ಎಂದು ಹೇಳಿದರು.







