
ನವದೆಹಲಿ: ರಾಜಕೀಯ ನಾಯಕರು ಹಾಗೂ ಬೆಂಬಲಿಗರ ಮನವಿಗಳ ನಡುವೆಯೂ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಪರಿಸರ ಹೋರಾಟಗಾರ ಸೋನಮ್ ವಾಂಗ್ಚೂಕ್ ತಿಳಿಸಿದ್ದಾರೆ. ಸರ್ಕಾರ ಸ್ಪಂದಿಸುವ ಮುನ್ನ ಉಪವಾಸ ಕೈಬಿಟ್ಟರೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.
ಬುಧವಾರ ರಾತ್ರಿ ಬಿಡುಗಡೆ ಮಾಡಿದ ವಿಡಿಯೋ ಸಂದೇಶದಲ್ಲಿ ಮಾತನಾಡಿದ ವಾಂಗ್ಚೂಕ್, ಸಾವಿರಾರು ಮಂದಿ ಉಪವಾಸ ಅಂತ್ಯಗೊಳಿಸುವಂತೆ ಮನವಿ ಮಾಡಿದ್ದು, ಹಲವು ಹಿರಿಯ ನಾಯಕರು ಭೇಟಿಯಾಗಿ ಕಾಳಜಿ ವ್ಯಕ್ತಪಡಿಸಿದ್ದಾರೆ. ಆದರೆ ಈಗ ಹೋರಾಟ ನಿಲ್ಲಿಸಿದರೆ ಸರ್ಕಾರಕ್ಕೆ ಪ್ರತಿಭಟನೆಗಳನ್ನು ನಿರ್ಲಕ್ಷಿಸಬಹುದು ಎಂಬ ಸಂದೇಶ ಹೋಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಜುಲೈ 20ರಂದು ಕಾಕ್ರೋಚ್ ಜನತಾ ಪಾರ್ಟಿ ಕರೆ ನೀಡಿರುವ ‘ಸಂಸತ್ ಚಲೋ’ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಾಂಗ್ಚೂಕ್ ಮನವಿ ಮಾಡಿದ್ದಾರೆ.
ತಮ್ಮನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸುವಂತೆ ಕೋರಿ ಸಲ್ಲಿಸಿರುವ ಪಿಐಎಲ್ ಕುರಿತು ಪ್ರತಿಕ್ರಿಯಿಸಿದ ಅವರು, ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಇಸಿಜಿ ಸೇರಿದಂತೆ ಎಲ್ಲಾ ವೈದ್ಯಕೀಯ ವರದಿಗಳು ಸಾಮಾನ್ಯವಾಗಿವೆ. ದೈಹಿಕ ದೌರ್ಬಲ್ಯ ಇದ್ದರೂ ಹೋರಾಟ ಮುಂದುವರಿಸುವ ಸಾಮರ್ಥ್ಯವಿದೆ ಎಂದು ತಿಳಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಶಿಕ್ಷಣ ಕ್ಷೇತ್ರದ ಅಕ್ರಮಗಳನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಈ ಹೋರಾಟಕ್ಕೆ ಬೆಂಬಲವಾಗಿ ಸೋನಮ್ ವಾಂಗ್ಚೂಕ್ ಕಳೆದ 18 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.















































