
ಹುಬ್ಬಳ್ಳಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ ಸಾರಿಗೆ ನೌಕರರ ವೇತನ ಪರಿಷ್ಕರಣೆ ನನ್ನ ಕೈಯಲ್ಲಿಲ್ಲ. ಈ ಕುರಿತು ಮುಖ್ಯಮಂತ್ರಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಸಾರಿಗೆ ಸಂಸ್ಥೆ ನೌಕರರ ವೇತನ ಪರಿಷ್ಕರಣೆ ಹಿಂದಿನ ಸರ್ಕಾರ ಮಾಡಿದ ತಪ್ಪಿನಿಂದ ತಡವಾಗುತ್ತಿದೆ. 1-1-2023ರಿಂದ ವೇತನ ಪರಿಷ್ಕರಣೆ ಆಗಬೇಕಿತ್ತು. ಅದು ಆಗದ ಕಾರಣ ತಾಂತ್ರಿಕ ದೋಷವಾಗಿ ಸಮಸ್ಯೆಯಾಗಿದೆ. ಶೀಘ್ರದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಾರಿಗೆ ಸಂಸ್ಥೆಯಲ್ಲಿ 2016ರಲ್ಲಿ ನೇಮಕಾತಿ ಆಗದೆ ಸಿಬ್ಬಂದಿ ಕೊರತೆಯಿಂದ ಹೊರಗುತ್ತಿಗೆ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗಿತ್ತು. ಈಗ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಹೊರಗುತ್ತಿಗೆಗೆ ಕಡಿವಾಣವಾಗಲಿದೆ. ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇದ್ದು ಕಾಂಗ್ರೆಸ್ ಸಹಿ ಸಂಗ್ರಹ ಅಭಿಯಾನ ಮಾಡುತ್ತಿದೆ. ನನ್ನ ಕ್ಷೇತ್ರದಲ್ಲಿ 50 ಸಾವಿರ ಜನರ ಸಹಿ ಸಂಗ್ರಹವಾಗಿದೆ ಎಂದು ಸಚಿವರು ಹೇಳಿದರು.


ವೇತನ, ಭತ್ಯೆ ಹೆಚ್ಚಳ, ಬೋನಸ್ ನೀಡುವುದು ಸೇರಿದಂತೆ ವಿವಿಧ ಕಾರಣ ನೀಡಿ ಖಾಸಗಿ ಸಂಸ್ಥೆಯಿಂದ ನೇಮಕವಾಗಿರುವ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಕಳೆದ ಎರಡು ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಎರಡು ದಿನದಿಂದ 140ಕ್ಕೂ ಹೆಚ್ಚಿನ ಎಲೆಕ್ಟ್ರಿಕ್ ವಾಹನಗಳು ಡಿಪೋಗಳಲ್ಲೇ ನಿಂತಿದ್ದು, ಕಾರ್ಯಾಚರಣೆಗೊಂಡಿಲ್ಲ. ಅಲ್ಲದೆ, ಸಮಸ್ಯೆ ಬಗೆಹರಿಸುವಂತೆ ಖಾಸಗಿ ಸಂಸ್ಥೆಗಳಿಗೆ ಬಿಎಂಟಿಸಿ ಸೂಚನೆ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ವೇಳೆ ಅಧಿಕಾರಿಗಳು, ಬಿಎಂಟಿಸಿಗೆ ಗ್ರಾಸ್ ಕಾಸ್ಟ್ ಕಾಂಟ್ರ್ಯಾಕ್ಟ್ (ಜಿಸಿಸಿ) ಮಾದರಿಯಲ್ಲಿ ಎಲೆಕ್ಟ್ರಿಕ್ ಬಸ್ಗಳನ್ನು ಪಡೆಯಲಾಗುತ್ತಿದೆ. ಅದರಂತೆ ಬಸ್ಗಳನ್ನು ಪೂರೈಸುವ ಸಂಸ್ಥೆಯೇ ಅವುಗಳನ್ನು ನಿರ್ವಹಣೆ ಮಾಡಲಿದೆ ಹಾಗೂ ಅವುಗಳಿಗೆ ಚಾಲಕರನ್ನು ನೇಮಿಸಲಿದೆ. ಈ ವ್ಯವಸ್ಥೆಯು ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ತಿಳಿಸಿದ್ದಾರೆ.







