
ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ತ್ಯಜಿಸುವ ಸಾಧ್ಯತೆಗಳ ನಡುವೆಯೇ ಸಿದ್ದರಾಮಯ್ಯ ಅವರು ಗುರುವಾರ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ರಾಜೀನಾಮೆಗೆ ಮೊದಲು ತಮ್ಮ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿದ್ದು, ಡಿ.ಕೆ ಶಿವಕುಮಾರ್ ಸಹ ಭಾಗವಹಿಸಲಿದ್ದಾರೆ.
ಈ ವೇಳೆ ಹೈಕಮಾಂಡ್ ನಿರ್ಧಾರ ಮತ್ತು ತಮ್ಮ ಮುಂದಿನ ನಿಲುವಿನ ಬಗ್ಗೆ ಸಿದ್ದರಾಮಯ್ಯ ಸಚಿವರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ. ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೇಳಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ರಾಜಕೀಯ ಬೆಳವಣಿಗೆಗಳ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಸಿದ್ದರಾಮಯ್ಯ ನಿವಾಸದಲ್ಲಿ ಭೇಟಿ ಮಾಡಿ ಸುಮಾರು ಒಂದು ಗಂಟೆ ಮಾತುಕತೆ ನಡೆಸಿದರು.
ಇನ್ನೊಂದೆಡೆ, ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಒಳಗೆ ಚರ್ಚೆಗಳು ತೀವ್ರಗೊಂಡಿವೆ. ಕೆಲ ಶಾಸಕರು ಮತ್ತು ಸಚಿವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದು ನಾಯಕನ ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಮುಖ್ಯ ಸಚೇತಕ ಅಶೋಕ್ ಎಂ ಪಟ್ಟಣ ಅವರ ಪ್ರಕಾರ, ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಡಿ.ಕೆ ಶಿವಕುಮಾರ್ ಅವರಿಗೆ ಅವಕಾಶ ಸಿಗಬಹುದು ಎಂದೂ ಅವರು ಹೇಳಿದ್ದಾರೆ.
ಆದರೆ, ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಸುರ್ಜೆವಾಲಾ, “ಇದು ಕೇವಲ ವದಂತಿ. ದೆಹಲಿಯಲ್ಲಿ ನಡೆದ ಸಭೆಯಲ್ಲಿ ಚುನಾವಣೆ ವಿಚಾರ ಮಾತ್ರ ಚರ್ಚೆಯಾಗಿದೆ. ನಾಯಕತ್ವ ಬದಲಾವಣೆ ಕುರಿತು ಯಾವುದೇ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.




























