
ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶೇಷಾದ್ರಿಪುರದಲ್ಲಿ ಕರ್ನಾಟಕ ಮೆಮೊರಿ ಚಾಂಪಿಯನ್ಶಿಪ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಈ ವೇಳೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡೆಂಗ್ಯೂ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ್ದು ಸರ್ಕಾರ ಡೆಂಗ್ಯೂ ನಿಯಂತ್ರಣದಲ್ಲಿ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹುದ್ದೆ ಜಗಳದಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತವಾಗಿವೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಇದರ ನಡುವೆ ಡೆಂಗ್ಯೂ ಹಾಗೂ ಝಿಕಾ ಹೆಚ್ಚಾಗುತ್ತಿದೆ. ಸರ್ಕಾರ ಡೆಂಗ್ಯೂ ನಿಯಂತ್ರಣದ ಬಗ್ಗೆ ಕ್ರಮಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮುಂದಿನ ಅಧಿವೇಶನದಲ್ಲಿ ಡೆಂಗ್ಯೂ ಹಾಗೂ ಝಿಕಾ ಬಗ್ಗೆ ಚರ್ಚೆ ನಡೆಸಲಿದ್ದೇವೆ. ಆಸ್ಪತ್ರೆಗಳಲ್ಲಿ ಬಹಳಷ್ಟು ಜನರು ದಾಖಲಾಗುತ್ತಿದ್ದು, ಸರಿಯಾಗಿ ಔಷಧಿ ಸಿಗುತ್ತಿಲ್ಲ. ಔಷಧಿಯ ದರ ಹೆಚ್ಚಿಸಿದ್ದಾರೆ. ಡೆಂಗ್ಯೂ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿದ ಮೊತ್ತವನ್ನು ಯಾರೂ ಪಾಲಿಸುತ್ತಿಲ್ಲ ಎಂದು ಕಿಡಿಕಾರಿದರು.






























































































































