
ಬೆಂಗಳೂರು: ರಾಜ್ಯ ಸರ್ಕಾರವು ಹೊಸ ಆದೇಶವನ್ನು ಹೊರಡಿಸಿದ್ದು ಅದೇನೆಂದರೆ ಸಿಬಿಎಸ್ಇ, ಐಸಿಎಸ್ಇ ಮತ್ತು ಅಂತಾರಾಷ್ಟ್ರೀಯ ಮಂಡಳಿ ಐಬಿ ಸೇರಿದಂತೆ ಕೇಂದ್ರೀಯ ಪಠ್ಯಕ್ರಮದ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಬೋಧಿಸುವು ದನ್ನು ಕಡ್ಡಾಯಗೊಳಿಸಿ ನಿಯಮಾವಳಿಗಳಿಗೆ ತಿದ್ದು ಪಡಿ ತಂದು ರಾಜ್ಯ ಪತ್ರ ಹೊರಡಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಮೊದಲು ಕೇಂದ್ರೀಯ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿಯೇ ಬೋಧಿಸಬೇಕೆಂಬ ನಿಯಮ ಇತ್ತಾದರೂ, ಇದನ್ನು ತಿದ್ದುಪಡಿ ಮಾಡಿ ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಬೋಧಿಸಲು ಕರಡು ನಿಯಮಾವಳಿ ರೂಪಿಸಿ 2022ರ ಮೇ 13ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದಕ್ಕೆ ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳು, ಸಾಹಿತಿಗಳು, ಶಿಕ್ಷಣ ತಜ್ಞರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ ಹೀಗೆ ಎಲ್ಲ ಕಡೆಯಿಂದಲೂ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮತ್ತೆ ಈ ನಿಯಮಾವಳಿಗೆ ತಿದ್ದುಪಡಿ ಮಾಡಿ ಕನ್ನಡವನ್ನು ಪ್ರಥಮ ಹಾಗೂ ದ್ವಿತೀಯ ಭಾಷೆಯನ್ನಾಗಿ ಮಾಡಲು ಕಳೆದ ವರ್ಷದ ಮಾರ್ಚ್ನಲ್ಲಿ ಹೊಸ ಕರಡು ನಿಯಮಾವಳಿ ಪ್ರಕಟಿಸಿತ್ತು ಮತ್ತು ಆಕ್ಷೇಪಣೆಗೆ ಅವಕಾಶ ನೀಡಲಾಗಿತ್ತು. ಇದಕ್ಕೆ ಯಾವುದೇ ಆಕ್ಷೇಪಗಳು ಬಾರದ ಹಿನ್ನೆಲೆಯಲ್ಲಿ ಮೊದಲಿನಂತೆಯೇ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡವನ್ನು ಕಲಿಸಬೇಕೆಂದು ಅಧಿಕೃತ ರಾಜ್ಯಪತ್ರ ಹೊರಡಿಸಲಾಗಿದೆ. ಈ ನಿಯಮ ಅನುಸರಿಸಿದರೆ ಮಾತ್ರ ಖಾಸಗಿ ಶಾಲೆಗಳನ್ನು ನಡೆಸಲು ರಾಜ್ಯ ಸರ್ಕಾರದ ನಿರಾಕ್ಷೇಪಣಾ ಪತ್ರ ದೊರೆಯಲಿದೆ ಎಂದು ತಿಳಿಸಿದ್ದಾರೆ.