
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಸನ ಸಂಸದನ ಲೈಂಗಿಕ ಹಗರಣದ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ್ದು ಇದು ರಾಜ್ಯವೇ ತಲೆ ತಗ್ಗಿಸುವ ವಿಚಾರ. ಎನ್ಡಿಎ ಅಭ್ಯರ್ಥಿಯ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಪ್ರಶ್ನೆ ಮಾಡಿ ಎಂದು ಹೇಳಿದ್ದಾರೆ.
ದೆಹಲಿಯಿಂದ ಲೈಂಗಿಕ ಹಗರಣದ ಬಗ್ಗೆ ಕೇಳಲು ಕರೆಗಳ ಮೇಲೆ ಕರೆಗಳು ಬರುತ್ತಿವೆ. ಏನು ಮಾತನಾಡಬೇಕು ಎಂಬುದು ನಮಗೆ ಗೊತ್ತಾಗುತ್ತಿಲ್ಲ. ಈ ಬಗ್ಗೆ ನಮಗೆ ಕೇಳುವ ಬದಲು ಎನ್ಡಿಎ ಹಾಗೂ ಬಿಜೆಪಿ ನಾಯಕರಿಗೆ ಪ್ರಶ್ನಿಸಬೇಕು. ಶೋಭಾ ಕರಂದ್ಲಾಜೆ, ಬಿ.ಎಸ್. ಯಡಿಯೂರಪ್ಪ, ವಿಜಯೇಂದ್ರ, ಕುಮಾರಸ್ವಾಮಿ ಅವರು ಏನು ಹೇಳುತ್ತಾರೆ ಎಂಬುದನ್ನು ಕೇಳಬೇಕು ಎಂದು ಕಿಡಿ ಕಾರಿದರು. ಐಟಿ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದು ಕೇವಲ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದಾರೆ. ನಮ್ಮ ನಾಯಕರನ್ನು ಹೆದರಿಸಿ ಅವರ ಬಳಿ ಸಿಕ್ಕ ಹಣ ಕಾಂಗ್ರೆಸ್ ಪಕ್ಷ ಹಾಗೂ ಡಿ.ಕೆ.ಶಿವಕುಮಾರ್ ಅವರ ಹಣ ಎಂದು ಹೇಳಲು ಒತ್ತಾಯ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.