
ಬೆಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್ ಅನಧಿಕೃತವಾಗಿ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಪಡೆದಿರುವವರನ್ನು ‘ಅಕ್ರಮ-ಸಕ್ರಮ’ ಯೋಜನೆಯಡಿ ಸಕ್ರಮಗೊಳಿಸಲು ಸರ್ಕಾರ ಮೂರು ತಿಂಗಳಾವಕಾಶ ನೀಡಿದೆ. ನಿಗದಿತ ಶುಲ್ಕ ಪಾವತಿಸದಿದ್ದರೆ ಅವರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪರಿಷತ್ ಕಲಾಪದ ವೇಳೆ ಜೆಡಿಎಸ್ ಸದಸ್ಯ ಗೋವಿಂದರಾಜು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಒಂದು ಕೃಷಿ ಪಂಪ್ಸೆಟ್ ಸಕ್ರಮಗೊಳಿಸಲು ಸುಮಾರು ₹4.5 ಲಕ್ಷ ವೆಚ್ಚವಾಗುತ್ತದೆ. ಇದರಲ್ಲಿ ಸರ್ಕಾರವು ₹3 ಲಕ್ಷ ಹೊರುತ್ತದೆ, ಉಳಿದ ₹1.5 ಲಕ್ಷವನ್ನು ಬಳಕೆದಾರರು ಪಾವತಿಸಬೇಕು. ಕೆಲವರು ಈ ಮೊತ್ತವನ್ನು ಇನ್ನೂ ಪಾವತಿಸದ ಹಿನ್ನೆಲೆ ಅವರಿಗೆ ಅಂತಿಮವಾಗಿ ಮೂರು ತಿಂಗಳ ಗಡುವು ನೀಡಲಾಗಿದೆ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಗೋವಿಂದರಾಜು, ವಿದ್ಯುತ್ ಖರೀದಿ ಒಪ್ಪಂದ ಮತ್ತು ಹಣಕಾಸು ಸ್ಥಿತಿಯ ಕುರಿತು ಪ್ರಶ್ನೆ ಎತ್ತಿದರು. ರಾಜ್ಯದ ವಿದ್ಯುತ್ ಕ್ಷೇತ್ರದಲ್ಲಿ ಬಾಕಿ ಮೊತ್ತವು ಹೆಚ್ಚುತ್ತಿದ್ದು, ಕರ್ನಾಟಕ ವಿದ್ಯುತ್ ನಿಗಮಕ್ಕೆ ಸಾವಿರಾರು ಕೋಟಿ ರೂಪಾಯಿ ಬಾಕಿ ಉಳಿದಿದೆ ಎಂದು ಅವರು ಹೇಳಿದರು.
ಈ ಕುರಿತು ಸ್ಪಷ್ಟನೆ ನೀಡಿದ ಸಚಿವ ಜಾರ್ಜ್, ಕೇಂದ್ರ ಆಯೋಗದ ಅನುಮತಿಯೊಂದಿಗೆ ವಿದ್ಯುತ್ ಖರೀದಿ ಒಪ್ಪಂದಗಳನ್ನು ಮಾಡಲಾಗಿದೆ. ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಸಾಲದ ನೆರವಿನಿಂದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಖರೀದಿ ವೆಚ್ಚಗಳನ್ನು ನಿರ್ವಹಿಸಲಾಗುತ್ತಿದೆ. ಗೃಹಜ್ಯೋತಿ ಸೇರಿದಂತೆ ಸಬ್ಸಿಡಿ ಯೋಜನೆಗಳಡಿ ಎಸ್ಕಾಂಗಳಿಗೆ ಸರ್ಕಾರ ಸಮಯಕ್ಕೆ ಸರಿಯಾಗಿ ಹಣ ಬಿಡುಗಡೆ ಮಾಡುತ್ತಿದ್ದು, ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಸುಧಾರಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.






















































