
ಹುಬ್ಬಳ್ಳಿ: ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷರು ಆಣೆ ಪ್ರಮಾಣದ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಧಾರ್ಮಿಕ ಮತ್ತು ಪವಿತ್ರ ಕ್ಷೇತ್ರಗಳನ್ನು ರಾಜಕೀಯ ಚರ್ಚೆಗೆ ಎಳೆಯುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ರಾಜ್ಯಾಧ್ಯಕ್ಷರೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದೇನೆ. ಧರ್ಮಸ್ಥಳದಂತಹ ಭಕ್ತಿ ಮತ್ತು ಶ್ರದ್ಧೆಯ ಕೇಂದ್ರಗಳನ್ನು ರಾಜಕೀಯ ವಿಚಾರಗಳಲ್ಲಿ ತರಬಾರದು. ಈ ಪ್ರಕರಣಕ್ಕೆ ಸಂಬಂಧಿಸಿ ಸತ್ಯಶೋಧನಾ ಸಮಿತಿ ಕಾರ್ಯನಿರ್ವಹಿಸುತ್ತಿದ್ದು, ಸತ್ಯಾಸತ್ಯತೆ ಹೊರಬರುವವರೆಗೆ ಕಾಯಬೇಕು. ತಕ್ಷಣಕ್ಕೆ ಮಾಹಿತಿ ಲಭ್ಯವಾಗದಿದ್ದರೂ ಸತ್ಯ ಯಾವಾಗಲಾದರೂ ಹೊರಬರುತ್ತದೆ. ವಿಚಾರ ಸ್ಪಷ್ಟವಾದ ಬಳಿಕ ಅಗತ್ಯ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಅವರು ಹೇಳಿದರು.


































