
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ದೇಶವನ್ನುದ್ದೇಶಿಸಿ ಮಾತನಾಡುವ ವೇದಿಕೆಯನ್ನು ಆರ್ಎಸ್ಎಸ್ ಅನ್ನು ಹಾಡಿ ಹೊಗಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದುರುಪಯೋಗ ಮಾಡಿಕೊಂಡಿದ್ದಾರೆ. ಅವರ ಈ ನಡೆ ಸ್ವಾತಂತ್ರ್ಯ ಹೋರಾಟ, ರಾಷ್ಟ್ರಧ್ವಜ ಹಾಗೂ ಸಂವಿಧಾನದ ಆಶಯಕ್ಕೆ ಮಾಡಿರುವ ಅವಮಾನ. ಈ ಮಾತುಗಳನ್ನು ಹಿಂಪಡೆದು ಅವರು ದೇಶದ ಜನರ ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಅಧಿಕೃತ ಎಕ್ಸ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಅವರು, “ತಮ್ಮ ಕಚೇರಿಯಲ್ಲಿ ಇತ್ತೀಚಿನವರೆಗೆ ತ್ರಿವರ್ಣ ರಾಷ್ಟ್ರಧ್ವಜ ಹಾರಿಸಲು ನಿರಾಕರಿಸಿದ್ದ ಆರ್ಎಸ್ಎಸ್ ಅನ್ನು ಸ್ವಾತಂತ್ರ್ಯ ದಿನಾಚರಣೆಯ ಪವಿತ್ರ ವೇದಿಕೆಯಲ್ಲಿ ಹೊಗಳುವ ಮೂಲಕ ವೇದಿಕೆಯ ಘನತೆ ಹಾಗೂ ಗೌರವಗಳನ್ನು ಮಣ್ಣು ಪಾಲು ಮಾಡಿದ್ದಾರೆ. ದೇಶವನ್ನುದ್ದೇಶಿಸಿ ಮಾತನಾಡುತ್ತಾ ಆರ್ಎಸ್ಎಸ್ಗೆ ಅಭಿನಂದನೆ ಸಲ್ಲಿಸಲು ವೇದಿಕೆ ದುರುಪಯೋಗ ಮಾಡಿಕೊಂಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.



















