
ನವದೆಹಲಿ: ಇಂದು ಭಾರತದ ಮಾಜಿ ಪ್ರಧಾನಿ, ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯಲಿದ್ದು ಅದಕ್ಕೂ ಮುನ್ನ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರಿಗೆ ದರ್ಶನಕ್ಕೆ ಅವಕಾಶ ಒದಗಿಸಲಾಗಿದೆ.
ವಯೋಸಹಜ ಅನಾರೋಗ್ಯ ಕಾರಣದಿಂದ ಕೊನೆಯುಸಿರೆಳೆದ ಮಾಜಿ ಪ್ರಧಾನಿ ಮನಮೋಹನ್ ಅವರ ಅಂತ್ಯಕ್ರಿಯೆಯು ದೆಹಲಿಯಲ್ಲಿರುವ ನಿಗಮ್ ಬೋಧ ಘಾಟ್ನಲ್ಲಿ ಬೆಳಗ್ಗೆ 11:45 ಕ್ಕೆ ನಡೆಯಲಿದೆ. ದೇಶದ ಗಣ್ಯಾತಿಗಣ್ಯರು ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದು ಏಳು ದಿನ ಶೋಕಾಚರಣೆಗೆ ಸರ್ಕಾರ ನಿರ್ಧರಿಸಿದೆ.
ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಇಡಲಾಗಿದ್ದು, ಗಣ್ಯರು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಬೆಳಗ್ಗೆ 8 ಗಂಟೆಗೆ ದೆಹಲಿಯಲ್ಲಿರುವ ಎಐಸಿಸಿ ಕಚೇರಿಗೆ ಪಾರ್ಥಿವ ಶರೀರವನ್ನು ಶಿಫ್ಟ್ ಮಾಡಿದ್ದು 8:30 ರಿಂದ 9:30 ರ ವರೆಗೂ ಸಾರ್ವಜನಿಕರು ಮತ್ತು ಕಾರ್ಯಕರ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 9:30 ಬಳಿಕ ಮನಮೋಹನ್ ಸಿಂಗ್ ಅವರ ಅಂತಿಮ ಯಾತ್ರೆ ಆರಂಭವಾಗಿದ್ದು 11:45 ರ ವೇಳೆ ಸಿಖ್ ಧಾರ್ಮಿಕ ವಿಧಿವಿಧಾನಗಳ ಮೂಲಕ ಧಾರ್ಮಿಕ ಪ್ರಕ್ರಿಯೆ ನಡೆಯಲಿದ್ದು, ಬಳಿಕ ಸರ್ಕಾರಿ ಗೌರವಗಳೊಂದಿಗೆ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.




