ಪಕ್ಷದ ಎಲ್ಲಾ ಶಾಸಕರು, ಕಾರ್ಯಕರ್ತರು ಅನೇಕ ತ್ಯಾಗ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ : ಡಿಕೆ ಶಿವಕುಮಾರ್

ಹೊಸದಿಲ್ಲಿ: ಬುಧವಾರ ಡಿಸಿಎಂ ಡಿಕೆ ಶಿವಕುಮಾರ್ ದಿಲ್ಲಿಯ ಕರ್ನಾಟಕ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ಅಧಿಕಾರ ಹುದ್ದೆಗಿಂತ ಪಕ್ಷದ ಕಾರ್ಯಕರ್ತನಾಗಿರಲು ನಾನು ಬಯಸುತ್ತೇನೆ. ನನಗೆ ಅದೇ ಶಾಶ್ವತ. 1980 ರಿಂದ ನಾನು ಪಕ್ಷದ ಕಾರ್ಯಕರ್ತನಾಗಿದ್ದು 45 ವರ್ಷಗಳಿಂದ ಇಲ್ಲಿಯವರೆಗೂ ಪಕ್ಷಕ್ಕಾಗಿ ದುಡಿಯುತ್ತಿರುವೆ’ ಎಂದು ಹೇಳಿದ್ದಾರೆ.
ಅಧಿಕಾರ ಹಂಚಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು ನಮ್ಮ ನಡುವೆ ಏನೆಲ್ಲಾ ಚರ್ಚೆಯಾಗಿತ್ತು ಎಂದು ನಾನು ಬಹಿರಂಗಪಡಿಸಲು ಸಾಧ್ಯವಿಲ್ಲ. ನಾವು ಒಟ್ಟಾಗಿ ಸೇರಿ ಕೆಲಸ ಮಾಡಿ ಸರ್ಕಾರವನ್ನು ರಚಿಸಿದ್ದು ಪ್ರತಿ ಕಾರ್ಯಕರ್ತರು ಪಕ್ಷಕ್ಕಾಗಿ ತಮ್ಮ ಬೆವರು ಹರಿಸಿ ದುಡಿದಿದ್ದಾರೆ. ನಮಗೆ ಸ್ಪಷ್ಟ ಬಹುಮತ ನೀಡಿದ ರಾಜ್ಯದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಿದ್ದು ಇದನ್ನು ಮುಂದುವರಿಸುತ್ತೇವೆ. ಇಲ್ಲಿ ಕೇವಲ ಡಿಕೆಶಿ ಅಥವಾ ಸಿಎಂ ಸಿದ್ದರಾಮಯ್ಯ ಮಾತ್ರವಲ್ಲ. ಎಲ್ಲಾ ಶಾಸಕರು, ಕಾರ್ಯಕರ್ತರು ಅನೇಕ ತ್ಯಾಗ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.





















































































