
ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ 80 ಬಡಗಬೆಟ್ಟು ಗ್ರಾಮದಲ್ಲಿರುವ 6.30 ಎಕರೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಮೀನಿನಲ್ಲಿ ಉಡುಪಿ ಕಂಬಳ ಆಯೋಜನೆ ವಿಚಾರಕ್ಕೆ ಸಂಬಂಧಿಸಿ ವಿವಾದ ತಲೆದೋರಿದೆ. ಫೆಬ್ರವರಿ 28ರಂದು ಬೆಳಗ್ಗೆ 10 ಗಂಟೆಗೆ ಶಂಕುಸ್ಥಾಪನೆ ನೆರವೇರಿಸಲು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮುಂದಾಗಿದ್ದರೆ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಚ್ 4ರಂದು ಕಾರ್ಯಕ್ರಮ ನಡೆಸಲು ನಿರ್ಧರಿಸಿದ್ದಾರೆ. ಈ ಬೆಳವಣಿಗೆಯ ಹಿನ್ನೆಲೆ ಇಂದು ಯಾವುದೇ ಕಾರ್ಯಕ್ರಮ ನಡೆಯದಂತೆ ಜಿಲ್ಲಾಡಳಿತ ಆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.
ಜಿಲ್ಲಾ ಉಸ್ತುವಾರಿ ಸಚಿವೆ ಮತ್ತು ಸ್ಥಳೀಯ ಶಾಸಕರ ನಡುವಿನ ಭಿನ್ನಾಭಿಪ್ರಾಯ ತಾರಕಕ್ಕೇರಿರುವುದು ಗಮನಾರ್ಹ. ಕಂಬಳಕ್ಕಾಗಿ ಜಮೀನು ಕಾಯ್ದಿರಿಸಿರುವ ವಿಚಾರಕ್ಕೆ ಸಂಬಂಧಿಸಿ ಸ್ಥಳೀಯರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಮಾರ್ಚ್ 4ರಂದು ಅಧಿಕೃತ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಡಳಿತ ಈಗಾಗಲೇ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು ಅನಧಿಕೃತವಾಗಿ ಕಾರ್ಯಕ್ರಮ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ ತಿಳಿಸಿದ್ದಾರೆ.
ನಿಷೇಧಾಜ್ಞೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳನ್ನು ಸಾಗಿಸುವುದು, ಪಟಾಕಿ ಸಿಡಿಸುವುದು, ಪ್ರಚೋದನಕಾರಿ ಘೋಷಣೆಗಳು ನೀಡುವುದು, ಬಹಿರಂಗವಾಗಿ ಭಾಷಣ ಮಾಡುವುದು, ಹಾಡು–ಸಂಗೀತ ಕಾರ್ಯಕ್ರಮ ನಡೆಸುವುದು, ಆವೇಶಭರಿತ ಭಾಷಣ ಮಾಡುವುದು ಸೇರಿದಂತೆ ಯಾವುದೇ ರೀತಿಯ ಪ್ರಚೋದನಕಾರಿ ಚಟುವಟಿಕೆಗಳಿಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಜೊತೆಗೆ ಚಿತ್ರಗಳು, ಸಂಕೇತಗಳು, ಬಿತ್ತಿಪತ್ರಗಳು ಅಥವಾ ಇತರ ವಸ್ತುಗಳನ್ನು ತಯಾರಿಸಿ ಪ್ರದರ್ಶಿಸುವುದಕ್ಕೂ ಅವಕಾಶ ಇರುವುದಿಲ್ಲ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದೆ.






