
ಮಂಗಳೂರು: ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದಲ್ಲಿ ಭಾರೀ ವಂಚನಾ ಜಾಲವೊಂದನ್ನು ಭೇದಿಸಿ ಉದ್ಯಮಿಗಳಿಗೆ ನೂರಾರು ಕೋಟಿ ಸಾಲ ಕೊಡಿಸುವ ನೆಪದಲ್ಲಿ ಕೋಟಿ ಕೋಟಿ ವಂಚನೆ ಮಾಡುತ್ತಿದ್ದ ಕಿಂಗ್ ಪಿನ್ ರೋಹನ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜು.17 ರಂದು ರಾತ್ರಿ ಮಂಗಳೂರು ಹೊರವಲಯದ ಜಪ್ಪಿನಮೊಗರು ಎಂಬಲ್ಲಿನ ಐಷಾರಾಮಿ ಬಂಗಲೆಯ ಮೇಲೆ ಪೊಲೀಸ್ ತಂಡವು ದಾಳಿ ನಡೆಸಿ ರೊನಾಲ್ಡ್ ಸಲ್ದಾನಾ ಅಲಿಯಾಸ್ ರೋಹನ್ ಎಂಬಾತನನ್ನು ಬಂದಿಸಿದ್ದಾರೆ.
ಆರೋಪಿ ರೋಹನ್ ತಾನು ಉದ್ಯಮಿಯೆಂದು ಬಿಂಬಿಸಿ ಹೊರರಾಜ್ಯ, ಹೊರಜಿಲ್ಲೆಯಲ್ಲಿರುವ ಐಷಾರಾಮಿ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡಿ, ಜಾಗದ ವ್ಯವಹಾರ, ಸಾಲ ನೀಡುವ ನೆಪದಲ್ಲಿ ನಂಬಿಕೆ ಗಳಿಸುತ್ತಿದ್ದ. ಅದಲ್ಲದೇ ದೇಶದ ಪ್ರಮುಖ ನಗರಗಳಲ್ಲಿ ತನ್ನ ವಂಚನೆಗಾಗಿ ಏಜೆಂಟರ್ಗಳನ್ನ ಇರಿಸಿದ್ದ. ಅವರ ಮೂಲಕ ಡೀಲ್ ಕುದುರಿಸಲು ಮಂಗಳೂರಿನ ತನ್ನ ಐಷಾರಾಮಿ ಮನೆಗೆ ಕರೆಸಿ ತಾನೊಬ್ಬ ಅಗರ್ಭ ಶ್ರೀಮಂತನಂತೆ ನಡೆದುಕೊಳ್ಳುತ್ತಿದ್ದ.
ಮನೆಯಲ್ಲಿನ ಚಿನ್ನ, ಬಣ್ಣದ ಚಿತ್ತಾರ, ಎಲ್ಲಿ ನೋಡಿದ್ರೂ ವಿದೇಶಿ ಮದ್ಯಗಳು, ಮಲೇಶಿಯನ್ ಹುಡುಗಿಯರು ಎಲ್ಲವನ್ನು ಮನೆಗೆ ಬಂದ ಉದ್ಯಮಿಗಳಿಗೆ ನೀಡುತ್ತಿದ್ದ. ಐಷಾರಾಮಿ ಮನೆ, ಅಲ್ಲಿನ ಆತಿಥ್ಯ ನೋಡಿಯೇ ಉದ್ಯಮಿಗಳು ಅವನು ತೋಡಿದ ಹಳ್ಳಕ್ಕೆ ಬೀಳುತ್ತಿದ್ದರು.
ಮೊದಲ ಸುತ್ತಿನ ಮಾತುಕತೆ ಬಳಿಕ ಉದ್ಯಮಿಗಳನ್ನು ತನ್ನ ವಂಚನಾ ಜಾಲಕ್ಕೆ ಬೀಳಿಸಿಕೊಳ್ಳುತ್ತಿದ್ದ ಆತ ಉದ್ಯಮಿಗಳ ಒಪ್ಪಿಗೆಯ ನಂತರ 50 ರಿಂದ 100 ಕೋಟಿ ರೂ. ಅಥವಾ ಅದಕ್ಕಿಂತ ದೊಡ್ಡ ಮೊತ್ತದ ಸಾಲ ನೀಡಲು 5-10 ಕೋಟಿ ರೂ. ಸ್ಟ್ಯಾಂಪ್ ಡ್ಯೂಟಿ ಹಣ ನೀಡುವಂತೆ ಕೇಳುತ್ತಿದ್ದ. ಆತನ ಬಣ್ಣದ ಮಾತಿಗೆ ಮರುಳಾಗಿ ಉದ್ಯಮಿಗಳು ಹಿಂದೆ-ಮುಂದೆ ನೋಡದೇ ಕೋಟ್ಯಂತರ ರೂ. ಹಣವನ್ನು ನಗದು ರೂಪದಲ್ಲಿ ನೀಡುತ್ತಿದ್ದರು. ತಾನು ನಿರೀಕ್ಷೆ ಮಾಡಿದಷ್ಟು ಹಣ ವಸೂಲಿಯಾದ ಬಳಿಕ ನಾನಾಕಾರಣ ಹೇಳಿ ಮೊಬೈಲ್ ಸ್ವಿಚ್ಛ್ ಆಫ್ ಮಾಡಿ ಉದ್ಯಮಿಗಳಿಂದ ಎಸ್ಕೇಪ್ ಆಗುತ್ತಿದ್ದ. ಹೀಗೆ ಈತನಿಂದ ವಂಚನೆಗೊಳಗಾದ ಇಬ್ಬರು ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಏಕಾಏಕಿ ಮನೆಗೆ ನುಗ್ಗಿ ಆರೋಪಿಯನ್ನು ಬಂಧಿಸಿದ್ದಾರೆ. ಕೇವಲ 3 ತಿಂಗಳಲ್ಲೇ 45 ಕೋಟಿ ರೂ. ವಂಚಿಸಿದ್ದು, ಈವರೆಗೂ 200 ಕೋಟಿ ರೂ. ಅಧಿಕ ಹಣವನ್ನು ವಂಚಿಸಿರುವುದು ಬೆಳಕಿಗೆ ಬಂದಿದೆ.
ಮನೆಯ ಸುತ್ತಮುತ್ತಲೂ ಸಿಸಿ ಕ್ಯಾಮೆರಾ ಹಾಕಿಸಿಕೊಂಡು ಮೋಸ ಹೋದವರು ಹಣ ಕೇಳಲು ಬಂದರೆ ಸೀಕ್ರೆಟ್ ರೂಮ್ಗೆ ಹೋಗಿ ಮನೆಯಲ್ಲಿ ಯಾರೂ ಇಲ್ಲ ಎಂಬಂತೆ ಬಿಂಬಿಸುತ್ತಿದ್ದ.
ಇದೀಗ ಬಂಧನದ ಬಳಿಕ ಪೊಲೀಸರ ತನಿಖೆ ವೇಳೆ ಮತ್ತಷ್ಟು ಮಾಹಿತಿ ಬಹಿರಂಗವಾಗಿದ್ದು, ಆತನ ಬ್ಯಾಂಕ್ ಖಾತೆಗಳಲ್ಲಿ 40 ಕೋಟಿ ರೂ. ಹಣ ಪತ್ತೆಯಾಗಿದೆ. ತನ್ನ ಹೆಂಡತಿ ಹಾಗೂ ಮಗುವಿನೊಂದಿಗೆ ಚೆನ್ನೈನಲ್ಲಿ ವಾಸವಾಗಿದ್ದ ಈತ, ಹೆಂಡತಿಯ ಹೆಸರಿನಲ್ಲೂ ಹಲವು ಉದ್ಯಮ ನಡೆಸುತ್ತಿದ್ದ ಎಂದು ವರದಿಯಾಗಿದೆ.