
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶನಿವಾರ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಿದ್ದು, ಸೀಟು ಹಂಚಿಕೆಯಾದವರು ಸೆ.3ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳುವಂತೆ ಸೂಚಿಸಿದೆ.
ಈ ಕುರಿತು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ಎಂಸಿಸಿ ಫಲಿತಾಂಶ ಹೊರಬಿದ್ದ ನಂತರ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ಗಳ ಎರಡನೇ ಸುತ್ತಿನ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗುವುದು. ಅಲ್ಲಿಯವರೆಗೂ ಈ ಕೋರ್ಸ್ಗಳಿಗೆ ಸೀಟು ಹಂಚಿಕೆಯಾದವರಿಗೆ ಯಾವುದೇ ಛಾಯ್ಸ್ ಆಯ್ಕೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ವೈದ್ಯಕೀಯ ಕೋರ್ಸ್ಗಳಿಗೆ ಸಂಬಂಧಿಸಿದಂತೆ ಅಖಿಲ ಭಾರತ ಮಟ್ಟದ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗುತ್ತಿರುವ ಕಾರಣ ಯುಜಿಸಿಇಟಿ ಅಭ್ಯರ್ಥಿಗಳ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಹಾಗೂ ಅವರಿಗೆ ಅನುಕೂಲ ಆಗಲಿ ಎನ್ನುವ ಕಾರಣಕ್ಕೆ ನಾಲ್ಕು ಛಾಯ್ಸ್ಗಳ ಆಯ್ಕೆಗೂ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಇಂದಿನಿಂದಲೇ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ಗಳನ್ನು ಹೊರತುಪಡಿಸಿ, ಇತರ ಎಲ್ಲ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಛಾಯ್ಸ್ ಆಯ್ಕೆಗೂ ಚಾಲನೆ ನೀಡಲಾಗಿದೆ. ಛಾಯ್ಸ್-1 ಮತ್ತು ಛಾಯ್ಸ್-2 ಅನ್ನು ಆಯ್ಕೆ ಮಾಡಿದವರಿಗೆ ಶುಲ್ಕ ಪಾವತಿಸಲು ಸೆ.2ರವರೆಗೆ ಅವಕಾಶ ನೀಡಲಾಗಿದ್ದು ಸೆ.3ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಛಾಯ್ಸ್-1 ಆಯ್ಕೆ ಮಾಡಿದವರು ಶುಲ್ಕ ಪಾವತಿಸಿ ಕಾಲೇಜಿಗೆ ಹೋಗಬೇಕು. ಛಾಯ್ಸ್-2 ಆಯ್ಕೆ ಮಾಡಿಕೊಂಡವರು ಶುಲ್ಕ ಪಾವತಿಸಿ, ಅಪ್ ಗ್ರೇಡೇಷನ್ಗೆ ಕಾಯಬಹುದು. ಛಾಯ್ಸ್-3 ಆಯ್ಕೆ ಮಾಡಿದವರು 10 ಸಾವಿರ ರೂಪಾಯಿ ಕಾಷನ್ ಡೆಪಾಸಿಟ್ (ಬಿಎಸ್ಸಿ ನರ್ಸಿಂಗ್, ಬಿಪಿಒ, ಬಿಪಿಟಿ ಮತ್ತು ಎಹೆಚ್ಎಸ್ ಕೋರ್ಸ್ಗಳಿಗೆ ಪ್ರವೇಶ ಪಡೆಯುವವರಿಗೆ ಇದು ಅನ್ವಯಿಸುವುದಿಲ್ಲ) ಕಟ್ಟಬೇಕು. ಛಾಯ್ಸ್-4 ಆಯ್ಕೆ ಮಾಡಿದವರು ಸಿಇಟಿ ಪ್ರಕ್ರಿಯೆಯಿಂದ ಹೊರಹೋಗಬೇಕಾಗುತ್ತದೆ.
ಸೀಟು ಹಂಚಿಕೆ ನಂತರ ಯಾವುದೇ ಛಾಯ್ಸ್ ಆಯ್ಕೆ ಮಾಡದವರನ್ನು ಈ ಸುತ್ತಿನಲ್ಲಿ ಇಡೀ ಪ್ರಕ್ರಿಯೆಯಿಂದ ಹೊರ ಹಾಕಲಾಗುತ್ತದೆ. ಅಂತಹವರನ್ನು ಪುನಃ ಒಳ ಬರುವುದಕ್ಕೂ ಬಿಡುವುದಿಲ್ಲ. ಸೀಟು ಬೇಕೊ-ಬೇಡವೋ ಎನ್ನುವುದನ್ನು ತಮ್ಮ ಛಾಯ್ಸ್ ಆಯ್ಕೆ ಮೂಲಕ ಖಾತರಿಪಡಿಸಬೇಕು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.