
ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ಎಚ್ ಪಿ ವಿ ಲಸಿಕಾ ಜಾಗೃತಿ ಕಾರ್ಯಕ್ರಮವು ಉಪಯುಕ್ತ ಮಾಹಿತಿಯೊಂದಿಗೆ ಅರ್ಥಪೂರ್ಣವಾಗಿ ನಡೆಯಿತು.
ಗರ್ಭಕಂಠದ ಕ್ಯಾನ್ಸರ್ಗೆ ಪ್ರಮುಖ ಕಾರಣವಾಗಿರುವ ಎಚ್ಪಿವಿ (ಹ್ಯೂಮನ್ ಪ್ಯಾಪಿಲೋಮಾ ವೈರಸ್) ಸೋಂಕನ್ನು ತಡೆಗಟ್ಟುವಲ್ಲಿ ಎಚ್ಪಿವಿ ಲಸಿಕೆ ಅತ್ಯಂತ ಪರಿಣಾಮಕಾರಿಯಾಗಿದೆ. ಈ ಲಸಿಕೆಯು ವೈರಸ್ ಸೋಂಕಿನಿಂದ ದೇಹವನ್ನು ರಕ್ಷಿಸುವ ಮೂಲಕ ಭವಿಷ್ಯದಲ್ಲಿ ಗರ್ಭಕಂಠದ ಕ್ಯಾನ್ಸರ್ ಉಂಟಾಗುವ ಅಪಾಯವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ. 2006ರಿಂದ ಬಳಕೆಯಲ್ಲಿರುವ ಈ ಲಸಿಕೆಯು ಹೆಣ್ಣು ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ವೃದ್ಧಿಸಿ, ಅವರ ಆರೋಗ್ಯಕರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತದೆ. ಸರ್ಕಾರದ ವತಿಯಿಂದ ಮೊದಲ ಬಾರಿಗೆ ಈ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಪ್ರತಿಯೊಬ್ಬ ಅರ್ಹ ವಿದ್ಯಾರ್ಥಿನಿಯೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ. ಅಕ್ಷತಾ ನಾಯಕ್, ಆಡಳಿತ ವೈದ್ಯಾಧಿಕಾರಿಗಳು, ಸಮುದಾಯ ಆರೋಗ್ಯ ಕೇಂದ್ರ, ಮೂಡುಬಿದಿರೆ ಇವರು ತಿಳಿಸಿದರು.ಈ ಸಂದರ್ಭದಲ್ಲಿ ಡಾ. ಅಕ್ಷತಾ ನಾಯಕ್ ರ ವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
“ಆರೋಗ್ಯವೇ ಭಾಗ್ಯ” ಎಂಬ ನಾಣ್ಣುಡಿಯಂತೆ ಉತ್ತಮ ಆರೋಗ್ಯವೇ ಜೀವನದ ಅಮೂಲ್ಯ ಸಂಪತ್ತು. ಈ ನಿಟ್ಟಿನಲ್ಲಿ ಎಕ್ಸಲೆಂಟ್ ಸಂಸ್ಥೆಯು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ, ನಿಯಮಿತ ದೈಹಿಕ ವ್ಯಾಯಾಮ, ಆರೋಗ್ಯಕರ ಜೀವನಶೈಲಿ ಮತ್ತು ಸ್ವಚ್ಛತೆಯ ಕುರಿತು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಜೊತೆಗೆ, ಕೇಂದ್ರ ಸರ್ಕಾರದ ಎಚ್ಪಿವಿ (HPV) ಲಸಿಕೆಯ ಕುರಿತು ವಿದ್ಯಾರ್ಥಿನಿಯರು ಹಾಗೂ ಪೋಷಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಕೈಗೊಂಡಿದ್ದು, ಈ ಲಸಿಕೆಯ ಪ್ರಯೋಜನವನ್ನು ಪಡೆದುಕೊಂಡು ಆರೋಗ್ಯಕರ ಭವಿಷ್ಯವನ್ನು ನಿರ್ಮಿಸಿಕೊಳ್ಳಬೇಕು ಎಂದು ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ. ಸಂಪತ್ ಕುಮಾರ್ ರವರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಸಿಬಿಎಸ್ಇ ಶಾಲೆಯ ಪ್ರಾಂಶುಪಾಲ ಶ್ರೀಪ್ರಸಾದ್, ಸಿಬಿಎಸ್ಇ ಸಂಯೋಜಕಿ ಶ್ರೀಮತಿ ವಿಮಲ. ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕುಮಾರಿ ಚಾರ್ವಿ ಸ್ವಾಗತಿಸಿ, ಕುಮಾರಿ ಪೂರ್ವಿ ವಂದಿಸಿ, ಚಾರ್ವಿ ಕಾರ್ಯಕ್ರಮವನ್ನು ನಿರೂಪಿಸಿದರು.


















































