
ಬೆಂಗಳೂರು: ಆಫ್ರಿಕಾದ ಕೆಲವು ದೇಶಗಳಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ರಾಜ್ಯಾದ್ಯಂತ ಮುನ್ನೆಚ್ಚರಿಕಾ ಕ್ರಮಗಳನ್ನು ಬಿಗಿಗೊಳಿಸಿ ಹೈ ಅಲರ್ಟ್ ಘೋಷಿಸಿದೆ. ಭಾರತದಲ್ಲಿ ಇದುವರೆಗೆ ಯಾವುದೇ ಎಬೋಲಾ ಪ್ರಕರಣ ವರದಿಯಾಗಿಲ್ಲವಾದರೂ ಸೋಂಕು ತಡೆಯಲು ವಿಶೇಷ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಎಬೋಲಾ ಪೀಡಿತ ರಾಷ್ಟ್ರಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರು 21 ದಿನಗಳ ಕಾಲ ಆರೋಗ್ಯ ಇಲಾಖೆಯ ಮೇಲ್ವಿಚಾರಣೆಯಲ್ಲಿ ಇರಬೇಕಿದ್ದು, ರೋಗಲಕ್ಷಣಗಳು ಕಂಡುಬಂದರೆ ತಕ್ಷಣ ಆಸ್ಪತ್ರೆಗೆ ಸಂಪರ್ಕಿಸುವಂತೆ ಸೂಚಿಸಲಾಗಿದೆ.
ತೀವ್ರ ಜ್ವರ, ತಲೆನೋವು, ಸ್ನಾಯು ಮತ್ತು ಗಂಟಲು ನೋವು, ವಾಂತಿ, ಅತಿಸಾರ, ಹೊಟ್ಟೆನೋವು ಹಾಗೂ ಕಣ್ಣು ಕೆಂಪಾಗುವುದು ಎಬೋಲಾ ಸೋಂಕಿನ ಪ್ರಮುಖ ಲಕ್ಷಣಗಳಾಗಿವೆ. ಸೋಂಕಿತ ವ್ಯಕ್ತಿಯ ರಕ್ತ ಅಥವಾ ದೇಹದ ದ್ರವಗಳ ನೇರ ಸಂಪರ್ಕದಿಂದ ರೋಗ ಹರಡುತ್ತದೆ.
ಸೋಂಕು ನಿಯಂತ್ರಣಕ್ಕಾಗಿ ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯನ್ನು ಐಸೋಲೇಷನ್ ಕೇಂದ್ರವಾಗಿ ಹಾಗೂ ಎಪಿಡೆಮಿಕ್ ಡಿಸೀಸ್ ಆಸ್ಪತ್ರೆಯನ್ನು ಕ್ವಾರಂಟೈನ್ ಕೇಂದ್ರವಾಗಿ ಗುರುತಿಸಲಾಗಿದೆ. ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮತ್ತು ಶ್ರೀನಿವಾಸ್ ಪೋರ್ಟ್ ಆಸ್ಪತ್ರೆಯಲ್ಲೂ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಹೆಚ್ಚಿಸಲಾಗಿದ್ದು, ಶಂಕಿತ ಪ್ರಕರಣಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗುತ್ತದೆ. ಜೊತೆಗೆ ಕ್ವಾರಂಟೈನ್, ಐಸೋಲೇಷನ್, ಆಂಬುಲೆನ್ಸ್, ಪಿಪಿಇ ಕಿಟ್ ಹಾಗೂ ರಾಪಿಡ್ ರೆಸ್ಪಾನ್ಸ್ ತಂಡಗಳನ್ನು ಸಜ್ಜುಗೊಳಿಸಲಾಗಿದೆ.
ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನಷ್ಟೇ ನಂಬುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.



























