
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಗಣತಿ ನಮೂನೆ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಹಿಂದೆ ಆಗಸ್ಟ್ 8 ಅಂತಿಮ ದಿನವಾಗಿದ್ದು, ಇದೀಗ ಆಗಸ್ಟ್ 17ರವರೆಗೆ ಕಾಲಾವಕಾಶ ನೀಡಲಾಗಿದೆ.
ಗಣತಿ ನಮೂನೆಗಳ ಭರ್ತಿ ಮತ್ತು ಸಲ್ಲಿಕೆ ವೇಳೆ ಗೈರು, ನಿಧನ, ಶಾಶ್ವತ ಸ್ಥಳಾಂತರ, ನಕಲಿ ಹಾಗೂ ಇತರ ವರ್ಗಗಳಿಗೆ ಸೇರಿದ ಸುಮಾರು 1.10 ಕೋಟಿ ಮತದಾರರ ವಿವರಗಳು ಪತ್ತೆಯಾಗಿವೆ. ಈ ಮಾಹಿತಿಯ ಪರಿಶೀಲನೆಗೆ ರಾಜಕೀಯ ಪಕ್ಷಗಳು ಹಾಗೂ ಮತದಾರರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ಅವಧಿ ವಿಸ್ತರಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ತಿಳಿಸಿದ್ದಾರೆ.
ಪರಿಷ್ಕೃತ ವೇಳಾಪಟ್ಟಿಯಂತೆ ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ಆ.24ರಿಂದ ಸೆ.23ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಅ.22ರವರೆಗೆ ನೋಟಿಸ್ ಜಾರಿ, ಪರಿಶೀಲನೆ ಮತ್ತು ಇತ್ಯರ್ಥ ಪ್ರಕ್ರಿಯೆ ನಡೆಯಲಿದೆ. ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ.

























































