
ಬೆಂಗಳೂರು: ನಗರದ ರಸ್ತೆ ಗುಂಡಿ ಮುಚ್ಚುವಿಕೆ ಮತ್ತು ಡಾಂಬರೀಕರಣ ಕಾಮಗಾರಿಗಳ ಕಳಪೆ ಗುಣಮಟ್ಟದ ವಿರುದ್ಧ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಕಠಿಣ ಕ್ರಮ ಕೈಗೊಂಡಿದ್ದಾರೆ.
ಕಳಪೆ ರಸ್ತೆ ಕಾಮಗಾರಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿಯ ಸಹಾಯಕ ಎಂಜಿನಿಯರ್ ಪೂಜಾರಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.
ಶನಿವಾರ ಸಂಪಂಗಿರಾಮನಗರ ಪ್ರದೇಶದಲ್ಲಿ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತಪಡಿಸಿ ತಕ್ಷಣ ತನಿಖೆಗೆ ಸೂಚನೆ ನೀಡಿದ್ದರು. ಪರಿಶೀಲನೆ ವೇಳೆ ಕಾಮಗಾರಿ ನಿಗದಿತ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂಬುದು ದೃಢಪಟ್ಟಿದೆ.
ಈ ಕುರಿತು ಪ್ರತಿಕ್ರಿಯಿಸಿದ ಕೃಷ್ಣ ಬೈರೇಗೌಡ, “ಇಂತಹ ಕ್ರಮವನ್ನು ಆಗಾಗ್ಗೆ ಕೈಗೊಳ್ಳುವ ಪರಿಸ್ಥಿತಿ ಬರಬಾರದು ಎಂದು ನಾನು ಆಶಿಸುತ್ತೇನೆ. ಆದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸದಿದ್ದರೆ, ಇಂತಹ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಎಲ್ಲರೂ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು” ಎಂದು ಎಚ್ಚರಿಕೆ ನೀಡಿದರು.
ಕಾಮಗಾರಿ ಮೇಲ್ವಿಚಾರಣೆಯಲ್ಲಿ ನಿರ್ಲಕ್ಷ್ಯ ಆರೋಪ ಕೇಳಿಬಂದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.


































