
ಬೆಂಗಳೂರು: ಪ್ರತಿಪಕ್ಷ ನಾಯಕ ಆರ್.ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ನಾಯಕರು ಮಹಿಳೆಯರಿಗೆ 2,000 ರೂ. ನೀಡುವ ಗ್ಯಾರಂಟಿ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಾರೆ. 2,000 ರೂ. ನೀಡುವ ಬದಲು ಮಹಿಳೆಯರ ಜೀವ ಉಳಿಸಿದರೆ ಸಾಕಿತ್ತು. ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಮೊದಲು ನೀಡಬೇಕು. ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು. ರಾಜ್ಯದಲ್ಲಿ ಬಾಣಂತಿಯರ ಮರಣ ಮೃದಂಗ ಇನ್ನೂ ನಿಂತಿಲ್ಲ. ಒಟ್ಟು 736 ತಾಯಂದಿರು ಮೃತಪಟ್ಟಿದ್ದು ಇದಕ್ಕೆ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಕಿಡಿಕಾರಿದರು.
ಹುಬ್ಬಳ್ಳಿಯಲ್ಲಿ ಬಾಣಂತಿ ಸತ್ತಿದ್ದಕ್ಕೆ ಅವರ ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಿಪಟೂರಿನಲ್ಲೂ ಒಬ್ಬ ಬಾಣಂತಿ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಪೂರೈಸಿದ ಐವಿ ದ್ರಾವಣದಿಂದಾಗಿ ಬಾಣಂತಿಯರು ಮೃತರಾಗುತ್ತಿದ್ದಾರೆ. ಕಾಂಗ್ರೆಸ್ನ ಸಮಾವೇಶ ನಡೆದಾಗಲೇ ಬಾಣಂತಿಯರು ಮೃತಪಟ್ಟಿದ್ದರೂ ಅಲ್ಲಿಗೆ ಹಿರಿಯ ನಾಯಕರು ಭೇಟಿ ನೀಡಿಲ್ಲ ಎಂದು ಆರೋಪಿಸಿದರು.



