
ಭೋಪಾಲ್: ಮಧ್ಯಪ್ರದೇಶದ ಛಿಂದ್ವಾರದಲ್ಲಿ ಕೆಮ್ಮಿನ ಸಿರಪ್ನ ಅಡ್ಡಪರಿಣಾಮದಿಂದಾಗಿ ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯವಾಗಿ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.ಮೊದಲು ಮಕ್ಕಳಿಗೆ ಶೀತ ಮತ್ತು ಸೌಮ್ಯ ಜ್ವರದ ಸಾಮಾನ್ಯ ಸಮಸ್ಯೆಗಳಂತೆ ಕಂಡುಬಂದು ಬಳಿಕ ಭೀಕರ ತಿರುವು ಪಡೆದುಕೊಂಡಿದ್ದು, ಮಕ್ಕಳಿಗೆ ನೀಡಿದ ಕೆಮ್ಮಿನ ಸಿರಪ್ನ ಅಡ್ಡಪರಿಣಾಮದಿಂದಾಗಿ ಕಿಡ್ನಿ ವೈಫಲ್ಯವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.ಜ್ವರದ ವಿಚಾರವಾಗಿ ಮಕ್ಕಳು ಸ್ಥಳೀಯ ಕ್ಲೀನಿಕ್ನಲ್ಲಿ ಚಿಕಿತ್ಸೆ ಪಡೆದಿದ್ದು ವೈದ್ಯರು ಕೆಮ್ಮಿನ ಸಿರಪ್ಗಳು ಸೇರಿದಂತೆ ನಿಯಮಿತ ಔಷಧಿಗಳನ್ನು ಸೂಚಿಸಿದರು.
ಅದನ್ನು ಸೇವಿಸಿದ ನಂತರ ಮಕ್ಕಳು ಚೇತರಿಸಿಕೊಳ್ಳುತ್ತಿರುವಂತೆ ತೋರುತ್ತಿದ್ದು ಆದರೆ ಕೆಲವೇ ದಿನಗಳಲ್ಲಿ ಮತ್ತೆ ರೋಗ ಲಕ್ಷಣಗಳು ಮರಳಿ ಮೂತ್ರ ವಿಸರ್ಜನೆಯಲ್ಲಿ ಹಠಾತ್ ಮತ್ತು ಆತಂಕಕಾರಿ ಇಳಿಕೆ ಕಂಡುಬಂದಿತ್ತು. ಸ್ಥಿತಿಯು ಬೇಗನೆ ಹದಗೆಟ್ಟು ಮೂತ್ರಪಿಂಡದ ಸೋಂಕುಗಳಾಗಿ ಮಾರ್ಪಟ್ಟಿದ್ದು ಬಳಿಕ ಉನ್ನತ ಚಿಕಿತ್ಸೆಗಾಗಿ ಮಹಾರಾಷ್ಟ್ರದ ನಾಗ್ಪುರಕ್ಕೆ ಮಕ್ಕಳನ್ನು ಕರೆದೊಯ್ಯಲಾಗಿದ್ದರೂ, ಮೂವರು ಮಕ್ಕಳು ಅಲ್ಲಿಯೇ ಸಾವನ್ನಪ್ಪಿದರು.ಮಕ್ಕಳ ಮೂತ್ರಪಿಂಡದ ಬಯಾಪ್ಸಿ ಪರೀಕ್ಷೆಯಲ್ಲಿ ಔಷಧೀಯ ವಿಷಕ್ಕೆ ಸಂಬಂಧಿಸಿದ ವಿಷಕಾರಿ ರಾಸಾಯನಿಕವಾದ ಡೈಥಿಲೀನ್ ಗ್ಲೈಕಾಲ್ ಮಾಲಿನ್ಯ ಇರುವುದು ಬೆಳಕಿಗೆ ಬಂದಿದ್ದು ವಿಷಕಾರಿ ಡೈಥಿಲೀನ್ ಗ್ಲೈಕೋಲ್ ಬೆರೆಸಿದ ಕಲುಷಿತ ಕೆಮ್ಮಿನ ಸಿರಪ್ ಸಾವುಗಳಿಗೆ ಕಾರಣ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಹೆಚ್ಚಿನ ಮಕ್ಕಳಿಗೆ ಕೋಲ್ಡ್ರಿಫ್ ಮತ್ತು ನೆಕ್ಸ್ಟ್ರೋ-ಡಿಎಸ್ ಸಿರಪ್ಗಳನ್ನು ನೀಡಲಾಗಿತ್ತು. ಚಿಂದ್ವಾರ ಜಿಲ್ಲಾಧಿಕಾರಿ ಶೀಲೇಂದ್ರ ಸಿಂಗ್ ಅವರು ಜಿಲ್ಲೆಯಾದ್ಯಂತ ಎರಡು ಸಿರಪ್ಗಳ ಮಾರಾಟವನ್ನು ತಕ್ಷಣವೇ ನಿಷೇಧಿಸಿದ್ದು ಮತ್ತು ಇದರ ಬಳಕೆ ಮಾಡದಂತೆ ವೈದ್ಯರು, ಔಷಧಾಲಯಗಳು ಮತ್ತು ಪೋಷಕರಿಗೆ ತುರ್ತು ಸಲಹೆಯನ್ನು ನೀಡಲಾಗಿದೆ. ಜಿಲ್ಲಾಡಳಿತವು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ತಂಡವನ್ನು ಪರೀಕ್ಷೆಗೆ ಕರೆದಿದ್ದು, ತನಿಖೆ ಮುಂದುವರೆದಿದೆ.



















