
ಮುಂಬೈ: ಭವಿಷ್ಯದ ಪೀಳಿಗೆಯ ಉದ್ಯಮಿಗಳಿಗೆ ಮಾದರಿಯಾಗಿದ್ದ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಅನಾರೋಗ್ಯ ಹಿನ್ನೆಲೆ ಮುಂಬೈನ ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದು ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾರೆ.
ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ರತನ್ ಟಾಟಾ ಅವರ ನಿಧನದ ಕುರಿತು ಏಕನಾಥ್ ಶಿಂಧೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಟಾಟಾ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಗುರುವಾರ ಮಹಾರಾಷ್ಟ್ರದಲ್ಲಿ ಶೋಕಾಚರಣೆ ಮಾಡಲಾಗುತ್ತದೆ. ಗೌರವ ಸೂಚಕವಾಗಿ ಮಹಾರಾಷ್ಟ್ರದ ಸರ್ಕಾರಿ ಕಚೇರಿಗಳಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು. ಇಂದು ನಿಗದಿಯಾಗಿದ್ದ ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಟಾ ಅವರ ಪಾರ್ಥಿವ ಶರೀರವನ್ನು ಮುಂಬೈನ ನಾರಿಮನ್ ಪಾಯಿಂಟ್ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ನಲ್ಲಿ (NCPA) ಬೆಳಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ಇರಿಸಲಾಗಿದ್ದು ಅಲ್ಲಿ ಜನರು ಅಂತಿಮ ನಮನ ಸಲ್ಲಿಸಬಹುದು. ಬಳಿಕ ವರ್ಲಿ ಪ್ರದೇಶದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.













