
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಕೆಆರ್ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡುವ ವಿಚಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ದಾಖಲೆಗಳಲ್ಲಿ ಮಹಾರಾಜರ ಕಾಲದಲ್ಲೇ ಪ್ರಿನ್ಸಸ್ ರಸ್ತೆ ಎಂದು ಹೆಸರಿದ್ದರೆ ಬದಲಾವಣೆ ಮಾಡುವುದು ಬೇಡ ಎಂದು ಯೂ ಟರ್ನ್ ಹೊಡೆದಿದ್ದಾರೆ.
ಕೆಆರ್ಎಸ್ ರಸ್ತೆಗೆ ಅಧಿಕೃತ ಹೆಸರಿಲ್ಲ, ಖಾಲಿ ಇದೆ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ಹೆಸರನ್ನು ಇಡಬಹುದು ಎಂದು ಹೇಳಿದ್ದೆ. ಕೆಆರ್ಎಸ್ ರಸ್ತೆಗೆ ಪ್ರಿನ್ಸಸ್ ಎಂದು ಮಹಾರಾಜರ ಕಾಲದಲ್ಲೇ ಹೆಸರಿತ್ತು ಎನ್ನುವುದಾದರೇ ಬದಲಾವಣೆ ಮಾಡುವುದು ಬೇಡ. ಈ ವಿಚಾರಕ್ಕೆ ನನ್ನ ತಕರಾರಿಲ್ಲ. ಹೆಸರು ಬದಲಾವಣೆ ಮಾಡುವುದು ಬೇಡ ಎಂದು ಸ್ಥಳೀಯ ಶಾಸಕ ಹರೀಶ್ ಗೌಡ ಅವರಿಗೆ ನಾನೇ ಮನವಿ ಮಾಡುತ್ತೇನೆ ಎಂದು ಹೇಳಿದರು.
ನೋಟಿಫಿಕೇಷನ್ ವಾಪಸ್ ತೆಗೆದುಕೊಳ್ಳಿ. ತಕರಾರು ಸಲ್ಲಿಸುವವರು ದಾಖಲೆಯನ್ನ ಒದಗಿಸಿ. ವಿವಾದವನ್ನು ಇಲ್ಲಿಗೆ ಮುಗಿಸೋಣ. ಮೈಸೂರಿಗೆ ಮಹಾರಾಜರ ಕೊಡುಗೆ ಬಹಳಷ್ಟಿದೆ. ಜನಪ್ರತಿನಿಧಿಗಳ ಕೊಡುಗೆ ಕೂಡ ಇದೆ. ಇಟ್ಟಿರುವ ಹೆಸರನ್ನು ಬದಲಾಯಿಸುವ ದಾಷ್ಟ್ಯ ನಮಗೆ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.




