
ನವದೆಹಲಿ: ದೆಹಲಿಯ ಶಾಸ್ತ್ರಿ ಭವನ, ಆರ್ಕೆ ಪುರಂ, ಮೋತಿ ಬಾಗ್ ಮತ್ತು ಕಿದ್ವಾಯಿ ನಗರ ಸೇರಿದಂತೆ ದೆಹಲಿ-ಎನ್ಸಿಆರ್ನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು ಪರಿಣಾಮ ನಗರದ ಕೆಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸಗೊಂಡಿದೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆಯು ಇಂದು ದೆಹಲಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಮಳೆಗೆ ನಗರದ ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತಗೊಂಡಿದೆ. ದೆಹಲಿಯಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯ ಪರಿಣಾಮ ಪಂಚಕುಯಿಯನ್ ಮಾರ್ಗ್, ಮಿಂಟೋ ರಸ್ತೆ, ಮಥುರಾ ರಸ್ತೆ ಹಾಗೂ ಭಾರತ್ ಮಂಟಪದ ಗೇಟ್ ಸಂಖ್ಯೆ 7 ಜಲಾವೃತಗೊಂಡಿದೆ. ಭಾರೀ ಮಳೆಯಿಂದಾಗಿ ಪ್ರತಿಕೂಲ ಹವಾಮಾನ ಉಂಟಾಗಿದ್ದು, ದೆಹಲಿಯಲ್ಲಿ ನೂರಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿದೆ.
ಇನ್ನು ಗೌತಮಬುದ್ಧನಗರದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಗೋಹಾನಾ, ಸೋನಿಪತ್, ರೋಹ್ಟಕ್, ಸೋಹಾನಾ, ಪಲ್ವಾಲ್, ನುಹ್, ಔರಂಗಾಬಾದ್ ಮತ್ತು ಇತರ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.