
ಮಂಗಳೂರು: ಈವರೆಗೆ ಲಕ್ಷಾಂತರ ಭಕ್ತರು ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಗಂಟೆಗಟ್ಟಲೆ ಸರತಿ ಸಾಲಿನಲ್ಲೇ ನಿಲ್ಲಬೇಕಿದ್ದು ಇದೀಗ ಭಕ್ತರ ಈ ಕಷ್ಟವನ್ನರಿತ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಬದಲಿ ಆರಾಮದಾಯಕ ವ್ಯವಸ್ಥೆಯನ್ನು ಮಾಡಿದ್ದಾರೆ.
ಅದೇನೆಂದರೆ ತಿರುಪತಿ, ಶಿರಡಿ ಕ್ಷೇತ್ರಗಳಲ್ಲಿ ಕ್ಯೂ ಕಾಂಪ್ಲೆಕ್ಸ್ ಮೂಲಕ ತೆರಳಿ ದೇವರ ದರ್ಶನ ಪಡೆಯುವ ಮಾದರಿಯಲ್ಲೇ ರಾಜ್ಯದಲ್ಲಿ ಮೊದಲು ಎಂಬಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಕ್ಯೂ ಕಾಂಪ್ಲೆಕ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ದೇವಸ್ಥಾನದ ಹಿಂಭಾಗದಲ್ಲಿ ಬರೋಬ್ಬರಿ 2,75,177 ಚದರ ಅಡಿ ವಿಸ್ತೀರ್ಣದ ಎರಡು ಅಂತಸ್ತಿನ ಕ್ಯೂ ಕಾಂಪ್ಲೆಕ್ಸ್ ತಲೆ ಎತ್ತಿದೆ. ಭಕ್ತರು ಸರತಿ ಸಾಲಿನಲ್ಲಿ ನಿಲ್ಲದೇ ವಿಶಾಲವಾದ ಭವನದಲ್ಲಿ ಕುರ್ಚಿಯಲ್ಲಿ ಕುಳಿತು ಕ್ರಮೇಣವಾಗಿ ಮುಂದಿನ ಭವನಗಳಿಗೆ ಸ್ಥಳಾಂತರಗೊಳ್ಳಬಹುದಾಗಿದೆ. ಎರಡು ಅಂತಸ್ಥಿನಲ್ಲಿ ತಲಾ 8 ರಂತೆ ಒಟ್ಟು 16 ವಿಶಾಲ ಭವನಗಳಿದ್ದು ಪ್ರತಿ ಭವನದಲ್ಲಿ 800 ಮಂದಿಯಂತೆ ಸುಮಾರು 12ಸಾವಿರ ಮಂದಿ ತಂಗಲು ಅವಕಾಶವಿದೆ.
ಇದು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಎಲ್ಲಾ ಸೌಲಭ್ಯಗಳನ್ನು ಹೊಂದಿದ್ದು ಕ್ಯೂ ಕಾಂಪ್ಲೆಕ್ಸ್ ಪ್ರವೇಶಿಸುತ್ತಿದ್ದಂತೆ ಎ.ಐ ತಂತ್ರಜ್ಞಾನದ ಕ್ಯಾಮೆರಾ ಎಲ್ಲಾ ಭಕ್ತರ ಸಂಖ್ಯೆಗಳನ್ನು ಲೆಕ್ಕ ಹಾಕುತ್ತದೆ. ಆರಂಭದಲ್ಲೆ ಸೇವಾ ರಶೀದಿ ಕೌಂಟರ್ ಇದ್ದು ಬಳಿಕ ಕೊಠಡಿಗೆ ಎಂಟ್ರಿ ನೀಡಲಾಗುತ್ತದೆ. ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದ್ದು, ಸ್ಟೇನ್ಲೆಸ್ ಸ್ಟೀಲ್ ಕುರ್ಚಿಗಳಿವೆ. ಭಕ್ತಾಧಿಗಳಿಗೆ ಮಾರ್ಗದರ್ಶನ ನೀಡಲು ಎಲ್ಲೆಡೆ ಡಿಜಿಟಲ್ ಸೂಚನಾ ಫಲಕಗಳ ವ್ಯವಸ್ಥೆ ಮಾಡಲಾಗಿದ್ದು, ಭವನ ಸಂಖ್ಯೆ, ದರ್ಶನದ ಅವಧಿ, ದೇವಸ್ಥಾನದ ಇತಿಹಾಸ ಪ್ರಸಾರವಾಗುತ್ತಿರುತ್ತದೆ.
ಪ್ರತಿ ಭವನದಲ್ಲಿಯೂ ಕ್ಯಾಂಟೀನ್, ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದ್ದು ಈ ವ್ಯವಸ್ಥೆಯಿಂದ 6-7 ಗಂಟೆ ಸರತಿ ಸಾಲಿನಲ್ಲಿ ನಿಲ್ಲುವ ಬದಲು ಒಂದೂವರೆ ಗಂಟೆಯೊಳಗೆ ದರ್ಶನ ಪಡೆಯಬಹುದಾಗಿದೆ.
ಸುಂದರ ಕಲಾಕೃತಿಗಳಿಂದ ಆಕರ್ಷಿಸುವ ಈ ಕ್ಯೂ ಕಾಂಪ್ಲೆಕ್ಸ್ ನ ಪ್ರತೀ ಕೊಠಡಿಯೊಳಗೂ ಸುಸಜ್ಜಿತ ಆಸನಗಳು, ಮಕ್ಕಳ ಆರೈಕೆ ಕೊಠಡಿ, ಟಿವಿ, ಉಚಿತ ಉಪಾಹಾರದ ವ್ಯವಸ್ಥೆ ಇದ್ದು ಇಡೀ ಕೊಠಡಿ 27 ಡಿಗ್ರಿ ಸೆಲ್ಸಿಯಸ್ ಕೂಲಿಂಗ್ ಸಿಸ್ಟಮ್ ಒಳಗೊಂಡಿರುವುದು ವಿಶೇಷವಾಗಿದೆ.



















