131 ದಿನಗಳ ಬಳಿಕ ಜೈಲಿನಿಂದ ಹೊರಬರಲಿರುವ ನಟ ದರ್ಶನ್

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ 140 ದಿನಗಳಿಂದ ಬಂಧನದಲ್ಲಿರುವ ನಟ ದರ್ಶನ್ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವು ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ದರ್ಶನ್ ಪರ ವಕೀಲರು ಮೂರು ತಿಂಗಳ ಜಾಮೀನು ಕೋರಿದ್ದರು. ಆದರೆ ಕೋರ್ಟ್ 6 ವಾರಗಳ ಜಾಮೀನು ಮಾತ್ರ ಮಂಜೂರು ಮಾಡಿ ದರ್ಶನ್ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಪ್ರತಿ ವಾರ ವೈದ್ಯಕೀಯ ವರದಿಯನ್ನು ಸಲ್ಲಿಕೆ ಮಾಡಿ ಪಾಸ್ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕೆಂದು ಕೋರ್ಟ್ ಷರತ್ತು ವಿಧಿಸಿದೆ. ನ್ಯಾಯಾಲಯದ ಎಲ್ಲಾ ಪ್ರಕ್ರಿಯೆ ಇಂದೇ ಪೂರ್ಣಗೊಂಡರೆ ಇಂದು ಸಂಜೆ ಅಥವಾ ರಾತ್ರಿಯೇ ದರ್ಶನ್ ಅವರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.
ಪ್ರತಿ ವಾರ ವೈದ್ಯಕೀಯ ವರದಿಯನ್ನು ಸಲ್ಲಿಕೆ ಮಾಡಬೇಕು. ಪಾಸ್ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕೆಂದು ಕೋರ್ಟ್ ಷರತ್ತು ವಿಧಿಸಿದೆ.
ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ದರ್ಶನ್ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದನ್ನು ಹೀಗೆ ಬಿಟ್ಟರೆ ಪರಿಸ್ಥಿತಿ ಗಂಭೀರವಾಗಲಿದೆ. ದರ್ಶನ್ ಸಮಸ್ಯೆ ಅವರಿಗೆ ಮಾತ್ರ ಗೊತ್ತು, ನಡಿಯೋಕೆ ಆಗಲ್ಲ.. ಕೂರೋದಿಕ್ಕೆ ಆಗಲ್ಲ. ಅವರಿಗೆ ಸಾಂಪ್ರದಾಯಿಕ/ಶಸ್ತ್ರಚಿಕಿತ್ಸೆಯ ಅಗತ್ಯವಿದೆ.
ಮೈಸೂರಿನ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಆಗಲು ಬಯಸಿದ್ದಾರೆ. ದರ್ಶನ್ ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡ. ಮೈಸೂರಲ್ಲಿ ಚಿಕಿತ್ಸೆ ಪಡೆಯುವುದರಿಂದ ಪ್ರಾಸಿಕ್ಯೂಷನ್ ಸಾಕ್ಷಿಗೂ ಸಮಸ್ಯೆ ಆಗಲ್ಲ. ಕೋರ್ಟ್ ಷರತ್ತು ವಿಧಿಸಿ, 3 ತಿಂಗಳು ಮಧ್ಯಂತರ ಜಾಮೀನು ಕೊಡಬೇಕು ಎಂದು ದರ್ಶನ್ ಪರ ವಕೀಲರು ನ್ಯಾಯಾಧೀಶರಿಗೆ ಮನವರಿಕೆ ಮಾಡಿದ್ದರು.
ಎಸ್ಪಿಪಿ ಪ್ರಸನ್ನಕುಮಾರ್ ಪ್ರತಿವಾದ ಮಂಡಿಸಿ, ಮೆಡಿಕಲ್ ಬೋರ್ಡ್ನಲ್ಲಿ ಪರೀಕ್ಷೆ ಮಾಡಿಸೋಣ. ವಿಕ್ಟೋರಿಯಾ/ಬೌರಿಂಗ್ನಲ್ಲಿ ಪರೀಕ್ಷೆ ಮಾಡಿಸಬಹುದು. ಮಂಡಳಿ ವರದಿ ಆಧರಿಸಿ ನಿರ್ಣಯ ತೆಗೆದುಕೊಳ್ಳಬೇಕು. ಖಾಸಗಿ ಆಸ್ಪತ್ರೆ ಬದಲು ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಆಗಬೇಕು ಎಂದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆರೋಗ್ಯದ ವಿಚಾರವಾಗಿ ನಿರ್ಲಕ್ಷ್ಯ ಸಲ್ಲದು. ಆರೋಗ್ಯ ಎಲ್ಲರ ಹಕ್ಕು ಎಂದು ಅಭಿಪ್ರಾಯಪಟ್ಟು ಬುಧವಾರಕ್ಕೆ ಆದೇಶ ಕಾಯ್ದಿರಿಸಿದ್ದರು. ಇಂದು ಹೈಕೋರ್ಟ್ ದರ್ಶನ್ ಗೆ ಆರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.






























































































































