
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ ದೇಶದಲ್ಲಿ ರಾಜಕಾರಣಿ ವಿರುದ್ದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣವನ್ನು ಸಿಬಿಐ ತನಿಖೆ ಮಾಡುತ್ತಿದ್ದರೆ ಅದು ನನ್ನ ಪ್ರಕರಣ ಮಾತ್ರ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ `ನನ್ನ ವಿರುದ್ಧ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ’ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ನನ್ನ ವಿರುದ್ಧ ಸಿಬಿಐ ವಿಚಾರಣೆಯನ್ನು ಹಿಂಪಡೆದಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಹೋಗಲಾಗಿದೆ. ನನಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆಯಿದ್ದು, ನ್ಯಾಯಪೀಠದಿಂದ ಅನ್ಯಾಯ ಅಗುವುದಿಲ್ಲ. ಸಿಬಿಐಗೆ ನನ್ನ ಮೇಲೆ ಬಹಳ ಪ್ರೀತಿಯಿದೆ. ಹೀಗಾಗಿ ನನ್ನನ್ನು ಬಿಡುತ್ತಿಲ್ಲ. ಈಗಾಗಲೇ ರಾಜ್ಯ ಹೈಕೋರ್ಟ್ ಸಿಬಿಐ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ. ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ನನ್ನ ವಿರುದ್ಧ ಸಿಬಿಐ ಈಗಾಗಲೇ ತನಿಖೆ ಮಾಡಿದೆ. ಈಗ ಲೋಕಾಯುಕ್ತ ತನಿಖೆ ಮಾಡುತ್ತಿದೆ. ಈ ಪ್ರಕ್ರಿಯೆ ಇನ್ನೂ 7-8 ವರ್ಷ ನಡೆಯುತ್ತದೆ ಎಂದರು.






















































