
ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಹಿಂದುಳಿದ ಜಾತಿಗಳ ಮಹಾ ಒಕ್ಕೂಟ ಆಯೋಜಿಸಿದ್ದ ಡಿ. ದೇವರಾಜ ಅರಸು ಅವರ 110ನೇ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ್ದು ಈ ವೇಳೆ ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಮಣ್ಣಾಗುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ ಎಂದು ಹೇಳಿದ್ದಾರೆ.
ಕೆಲವರು ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದಕ್ಕೆ ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ದೇನೆ ಎಂದು ಟೀಕೆ ಮಾಡುತ್ತಿದ್ದಾರೆ. ನಾನು ಜಾತಿ ಮೇಲೆ ನಂಬಿಕೆ ಇಟ್ಟವನಲ್ಲ. ನೀತಿ ಮೇಲೆ ನಂಬಿಕೆ ಇಟ್ಟಿರುವವನು. ಬಡವರ ಬಗ್ಗೆ ಕಾಳಜಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಎಲ್ಲಾ ವರ್ಗದ ಜನರ ಏಳಿಗೆಗೆ ಶ್ರಮಿಸುತ್ತಿದ್ದೇನೆ ಎಂದು ಹೇಳಿದರು.
ಈಗಾಗಲೇ ರಾಮನಗರ ಕ್ಷೇತ್ರದ ಬಡ ಜನರಿಗೆ 100 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಬೇಕು ಎಂದು ಜಿಲ್ಲೆಯ ಪ್ರತಿಧಿಗಳ ಸಭೆ ಕರೆದು ತೀರ್ಮಾನ ಮಾಡಲಾಗಿದೆ. ಬಗರ್ ಹುಕುಂ ಸೇರಿದಂತೆ, ಭೂ ಸುಧಾರಣಾ ಕಾಯ್ದೆಯಡಿ ಮಂಜೂರಾತಿಗೆ ಬಾಕಿ ಇರುವ ಭೂಮಿಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ದೇವರು ಅವಕಾಶ ಮಾತ್ರ ಕೊಡುತ್ತಾನೆ. ಸಿಕ್ಕಂತಹ ಅವಕಾಶವನ್ನು ಬಳಸಿಕೊಂಡು ಬಡ ಜನರ ಏಳಿಗೆ ಮಾಡದಿದ್ದರೆ ಅಧಿಕಾರವಿದ್ದು ಏನು ಲಾಭ? ಕನಕಪುರದಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಜನರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.









